ರಾಮನಗರ: ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಬಸ್ ಪಾಸ್ ವಿತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಇಲ್ಲಿನ ಕಂದಾಯ ಭವನದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ಪಾಸ್ ನೀಡುವುದಾಗಿ ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಈ ಬಾರಿಯ ಬಜೆಟ್ನಲ್ಲಿ ಅದಕ್ಕೆ ಅನುದಾನ ನೀಡದೇ ವಂಚಿಸಲಾಗಿದೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು.
ಸಾರಿಗೆ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ನಿಗ್ರಹಿಸಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಅದರಿಂದ ಉಳಿಯುವ ಹಣದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.
ಎಐಡಿಎಸ್ಒ, ಎಐಡಿವೈಒ ಮತ್ತು ಎಐಎಂಎಸ್ಎಸ್ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.