ರಾಮನಗರ: ‘ಇದೇ 18ರಂದು ನಡೆಯಲಿರುವ ಚುನಾವಣೆಯಲ್ಲಿ ಜನರು ಯಾವುದೇ ಆಮಿಷಗಳಿಗೆ ಒಳಗಾಗದೇ ಜಾಗೃತರಾಗಿ ಮತ ಚಲಾಯಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಪಿ. ಮುಲ್ಲೈ ಮುಹಿಲನ್ ಮನವಿ ಮಾಡಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರಿದ್ದಾರೆ. ಇದೇ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ಯಾವುದೇ ರೀತಿಯ ಪ್ರಲೋಭನೆಗಳಿಗೆ ಒಳಗಾಗಬಾರದು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯ ವೆಚ್ಚ ವೀಕ್ಷಕ ಅರವಿಂದ್ ನಿರಂಜನ್ ಸೊಂಟಕ್ಕೆ ಮಾತನಾಡಿ ಚುನಾವಣೆಯಲ್ಲಿ ಜಾಗರೂಕತೆಯಿಂದ ಯಾರನ್ನು ಆಯ್ಕೆ ಮಾಡಬೇಕು ಎಂದು ಅರಿತು ಮತದಾನ ಮಾಡಬೇಕು ಎಂದು ತಿಳಿಸಿದರು.
ವಿವಿಧ ಸ್ಪರ್ಧೆ ಆಯೋಜನೆ: ಪ್ರತಿ ಕಾಲೇಜುಗಳಿಗೆ ಒಂದು ತಂಡದಂತೆ 18 ರಿಂದ 21 ವಯೋಮಿತಿಯವರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಾಲಿಬಾಲ್ ಹಾಗೂ ಥ್ರೋಬಾಲ್ ಹಾಗೂ ಅಂಗವಿಕಲರಿಗೆ ಬಕೆಟ್ ನಲ್ಲಿ ಚೆಂಡು, ಇಂಡಿಯನ್ ಕ್ಲಬ್ ರೋರಿಂಗ್, ಗಾಲಿ ಕುರ್ಚಿ ಓಟ ಸ್ಪರ್ದೆಯನ್ನು ಆಯೋಜಿಸಲಾಗಿತ್ತು. ಇದೇ ಸಂದರ್ಭ ರಂಗೋಲಿ ಸ್ಪರ್ಧೆಯೂ ನಡೆಯಿತು.
ಬಹುಮಾನ ವಿತರಣೆ: ರಾಮನಗರ: ಕ್ರೀಡಾ ಸ್ಪರ್ಧೆಗಳು, ಕಾಲೇಜು ಹಂತದ ಸಾಂಸ್ಕೃತಿಕ ಸ್ಪರ್ಧೆಗಳು, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ರಂಗೋಲಿ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಕೆ. ರಾಜೇಂದ್ರ ಜಿ.ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದರು.
‘ಈವರೆಗೆ ಸ್ವೀಪ್ ಸಮಿತಿ ವತಿಯಿಂದ 1250 ಕಾರ್ಯಕ್ರಮಗಳು ಯಶಸ್ವಿಯಾಗಿವೆ. ಮತದಾನದ ಹಕ್ಕು ಪಡೆದಿರುವ ಪ್ರತಿಯೊಬ್ಬರು ತಪ್ಪದೇ ಮತ ಚಲಾಯಿಸಬೇಕು’ ಎಂದು ಅವರು ತಿಳಿಸಿದರು.
ಎಂ.ಪಿ. ಮುಲ್ಲೈಮುಹಿಲನ್, ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಜಯಂತ್, ಪಿ. ಸೋಮಲಿಂಗಯ್ಯ, ಪವಿತ್ರಾ ದೇವಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಂಗಮಾರೇಗೌಡ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಇದ್ದರು.