ಚನ್ನಪಟ್ಟಣ: ದೇಶದ ಪ್ರಗತಿಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ಹೇಳಿದರು.
ಪಟ್ಟಣದ ಗುರು ಭವನದಲ್ಲಿ ಕನ್ನಡ ಮಾಧ್ಯಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಅವರು ಮಾತನಾಡಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಶಾಂತಿ ಮಂತ್ರದಿಂದಲೇ ಅವಿರತ ಹೋರಾಟ ನಡೆಸಿ ಬ್ರಿಟಿಷರನ್ನು ದೇಶದಿಂದಲೇ ಓಡಿಸಿದ ಗಾಂಧೀಜಿ ಅವರು ದೇಶ ಕಂಡ ಅಪ್ರತಿಮ ನಾಯಕರು. ಹಾಗೆಯೇ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಇಂದಿನ ರಾಜಕಾರಣಿಗಳಿಗೆ ಮಾದರಿ ಎಂದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ವರ್ತಕರ ಸಂಘವು ಶಾಲೆಯ ಇಬ್ಬರು ಬಡ ಕುಟುಂಬದ ವಿದ್ಯಾರ್ಥಿನಿಯರನ್ನು ದತ್ತು ಪಡೆದು, ಇಬ್ಬರು ವಿದ್ಯಾರ್ಥಿನಿಯರಿಗೆ ಎಸ್.ಎಸ್.ಎಲ್.ಸಿವರೆಗೆ ಶಿಕ್ಷಣ ಕೊಡಿಸಿ ಅವರ ಜೀವನೋಪಾಯಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.
ತಾಲ್ಲೂಕು ವರ್ತಕರ ಸಂಘದ ಅಧ್ಯಕ್ಷ ಕಿಶೋರ್, ಪ್ರಧಾನ ಕಾರ್ಯದರ್ಶಿ ಸುರೇಶ್, ಪದಾಧಿಕಾರಿಗಳಾದ ಪಾರ್ಥಸಾರಥಿ, ಪುರುಷೋತ್ತಮ್, ವಕೀಲ ಗುರುಮೂರ್ತಿ ಅವರನ್ನು ಶಾಲಾಯಿಂದ ಸನ್ಮಾನಿಸಲಾಯಿತು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಶಿವಣ್ಣ, ಶಿಕ್ಷಣ ಸಂಯೋಜಕ ಚಕ್ಕೆರೆ ಯೋಗೇಶ್, ಗಂಗಾಧರಮೂರ್ತಿ, ಶಾಲೆಯ ಮುಖ್ಯಶಿಕ್ಷಕ ಮಲ್ಲಿಕಾರ್ಜುನಯ್ಯ, ದೈಹಿಕ ಶಿಕ್ಷಣ ಶಿಕ್ಷಕ ಸಂಗಮೇಶ ಹಿರೇಮಠ್, ಸಹ ಶಿಕ್ಷಕರಾದ ಕೃಷ್ಣಮ್ಮ, ಶ್ವೇತಾ, ಶ್ರೀದೇವಿ ಹಾಜರಿದ್ದರು.