ರಾಮನಗರ: ‘ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎನ್ನುವುದು ಶುದ್ಧ ಸುಳ್ಳು. ಉದ್ದೇಶಪೂರ್ವಕವಾಗಿಯೇ ಈ ರೀತಿ ವದಂತಿ ಹಬ್ಬಿಸಲಾಗುತ್ತಿದೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಯೋಗೇಶ್ವರ್ಗೆ ಕಾಂಗ್ರೆಸ್ ಗಾಳ ಹಾಕುತ್ತಿರುವ ಸುದ್ದಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ಬಿಜೆಪಿ ನನಗೆ ವಿಧಾನ ಪರಿಷತ್ ಸ್ಥಾನದ ಜೊತೆಗೆ ಹಿಂದಿನ ಸರ್ಕಾರದಲ್ಲಿ ಸಚಿವ ಸ್ಥಾನವನ್ನೂ ನೀಡಿದೆ. ಮುಂದೆಯೂ ಅವಕಾಶ ಸಿಗಲಿದೆ. ಆದಾಗ್ಯೂ ಯಾವುದೇ ಹುದ್ದೆಗೆ ಅಪೇಕ್ಷೆ ಪಡದೇ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಯಾಗಿಯೇ ಕಣಕ್ಕೆ ಇಳಿಯುತ್ತೇನೆ’ ಎಂದಿದ್ದಾರೆ.
‘ಪ್ರತಿ ಆರು ತಿಂಗಳಿಗೆ ಒಮ್ಮೆ ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಇದರ ಹಿಂದೆ ಯಾವ ಉದ್ದೇಶ ಇದೆಯೋ ಗೊತ್ತಿಲ್ಲ’ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಚನ್ನಪಟ್ಟಣದಲ್ಲಿ ಶನಿವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ‘ಅವರು ನಮ್ಮ ಪಕ್ಷದ ನಾಯಕರಾಗಿದ್ದು, ಈಗಾಗಲೇ ಹಲವು ಬಾರಿ ಸಚಿವರಾಗಿದ್ದಾರೆ. ಮುಂದೆಯೂ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ’ ಎಂದು ಹೇಳಿದರು.