ರಾಮನಗರ: ಕರ್ನಾಟಕ ಜಾನಪದ ಪರಿಷತ್ತಿನ ವತಿಯಿಂದ ಇಲ್ಲಿನ ಜಾನಪದ ಲೋಕದಲ್ಲಿ ಇದೇ 13ರಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಇಲ್ಲಿನ ಡಣಾಯಕನಪುರದ ಭಾಗವಂತಿಕೆ ಹಾಗೂ ಪಟ ಕುಣಿತದ ಕಲಾವಿದ ಮೋಟಪ್ಪ ತಿಂಗಳ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಜವಾಹರಲಾಲ್ ನೆಹರೂ ಹಾಗೂ ಮೊರಾರ್ಜಿ ದೇಸಾಯಿ ಅವರು ಪ್ರಧಾನಿಯಾಗಿದ್ದಾಗ 1962, 1976ರ ಎರಡೂ ಸಮಯದಲ್ಲಿ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್ ನಲ್ಲಿ ಇವರು ಪ್ರದರ್ಶನ ನೀಡಿದ್ದಾರೆ. ವಯಸ್ಸು 80 ಆದರೂ ಕಲಾ ಪ್ರದರ್ಶನದಲ್ಲಿ ಇವರ ಉತ್ಸಾಹ ಕಡಿಮೆಯಾಗಿಲ್ಲ.
ಭಾಗವಂತಿಕೆಯ ಮೇಳದ ಮುಖ್ಯ ಹಾಡುಗಾರರಾಗಿರುವ ಇವರು ರಾಮಾಯಣ, ಕುರುಕ್ಷೇತ್ರ ಸೇರಿದಂತೆ ನೂರಾರು ಪೌರಾಣಿಕ ನಾಟಕಗಳಲ್ಲಿಯೂ ಅಭಿನಯಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ, ಗೌರವ ಕಾರ್ಯದರ್ಶಿ ಡಾ. ರಾಜೇಗೌಡ ಹೊಸಹಳ್ಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಸ್. ಶಂಕರಪ್ಪ, ಜಾನಪದ ಲೋಕದ ಆಡಳಿತಾಧಿಕಾರಿ ಕುರುವ ಬಸವರಾಜ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.