ಕನಕಪುರ: ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳ ಸಹಯೋಗದಲ್ಲಿ ನಗರದಲ್ಲಿ 75ನೇ ಸ್ವಾತಂತ್ರ್ಯ ಮಹೋತ್ಸವದ ಬಗ್ಗೆ ಜಾಗೃತಿ ಯಾತ್ರೆ ಭಾನುವಾರ ನಡೆಯಿತು.
ಚನ್ನಬಸಪ್ಪ ವೃತ್ತದಲ್ಲಿ ನಗರಸಭೆ ಅಧ್ಯಕ್ಷ ಕೋಟೆ ಕೆರೆ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಸ್ವಾತಂತ್ರ್ಯ ನಮ್ಮೆಲ್ಲಾರ ಹೆಮ್ಮೆಯಾಗಿದ್ದು, ಇದರಲ್ಲಿ ಪ್ರತಿಯೊಬ್ಬ ನಾಗರಿಕ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಯಾತ್ರೆಯ ನೇತೃತ್ವ ವಹಿಸಿದ್ದ ಶಾಲಾ ಶಿಕ್ಷಕರಾದ ಪ್ರಸನ್ನ, ಮಹೇಶ್, ಸುರೇಶ್ ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇದು ನಮ್ಮೆಲ್ಲರ ಸೌಭಾಗ್ಯ. ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮ ಮತ್ತು ದೇಶಭಕ್ತಿ ಬಿತ್ತಬೇಕಿದೆ ಎಂದರು.
ಜನರಲ್ಲಿ ಸ್ವಾತಂತ್ರ್ಯೋತ್ಸವದ ಜಾಗೃತಿ ಮೂಡಿಸಲು ಮೂರು ದಿನಗಳ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರಲ್ಲಿ ದೇಶಕ್ಕಾಗಿ ಹೋರಾಡಿದ ದೇಶಪ್ರೇಮಿಗಳು ಮಹನೀಯರನ್ನು ನೆನೆಯುವ ಹಾಗೂ ಜನತೆಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿ ಮನೆ ಮನೆಯಲ್ಲೂ ತಿರಂಗಾ ಹಾರಿಸುವ ಮೂಲಕ ಅಮೃತ ಮಹೋತ್ಸವದಲ್ಲಿ ನಾವು ಪಾಲ್ಗೊಳ್ಳಬೇಕಿದೆಎಂದು ಹೇಳಿದರು.
ದೇಶದ ಪ್ರಗತಿ ಪ್ರತಿಯೊಬ್ಬರ ಅಭಿವೃದ್ಧಿ. ಆ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಬೇಕು. ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.
ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ಸರ್ಕಾರಿ ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯರು ಶಾಲೆಯ ಶಿಕ್ಷಕ, ಶಿಕ್ಷಕಿಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.