ರಾಮನಗರ: ಆರ್ಥಿಕತೆಗೆ ಶಕ್ತಿ ತುಂಬಲು ವಿವಿಧ ಯೋಜನೆ

ರಾಮನಗರ: ಕೋವಿಡ್ನಿಂದ ಸಂಕಷ್ಟಕ್ಕೆ ಸಿಲುಕಿರುವ ಆರ್ಥಿಕತೆಗೆ ಶಕ್ತಿ ತುಂಬಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನರು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಉಪ ಪ್ರಧಾನ ವ್ಯವಸ್ಥಾಪಕ ನಂಜುಂಡಪ್ಪ ಸಲಹೆ ನೀಡಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಜಿಲ್ಲಾ ಲೀಡ್ ಬ್ಯಾಂಕ್ ಕಚೇರಿ ವತಿಯಿಂದ ಆಯೋಜಿಸಿದ್ದ ಸಾಲ ಸಂಪರ್ಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಲ ಸಂಪರ್ಕ ಕಾರ್ಯಕ್ರಮದ ಮೂಲಕ ಗ್ರಾಹಕರಿಗೆ ಬ್ಯಾಂಕ್ಗಳಿಂದ ನೇರವಾಗಿ ಸೌಲಭ್ಯ ವಿತರಣೆ ಮಾಡಲಾಗುತ್ತದೆ. ಹೈನುಗಾರಿಕೆಗೂ ಸಾಲ ಲಭ್ಯವಿದೆ. ಜೊತೆಗೆ ಸ್ತ್ರೀಶಕ್ತಿ ಗುಂಪುಗಳಿಗೂ ವೈಯಕ್ತಿಕ ಸಾಲ ಸೌಲಭ್ಯ ನೀಡಲಾಗುತ್ತಿದೆ. ಪಡೆದ ಸಾಲವನ್ನು ಕೃಷಿ ಚಟುವಟಿಕೆಗಳು, ವ್ಯಾಪಾರ, ವ್ಯವಹಾರ ಸೇರಿದಂತೆ ಉದ್ದೇಶಿತ ಯೋಜನೆಗಳಿಗೆ ಬಳಕೆ ಮಾಡಬೇಕು. ಆಗ ಉತ್ತಮ ಪ್ರಗತಿ ಕಾಣಲು ಸಾಧ್ಯ ಎಂದರು.
ಕೇಂದ್ರ ಸರ್ಕಾರವು ಪಿಎಂಜಿವೈ, ಮುದ್ರಾ ಯೋಜನೆ, ಸ್ಟಾರ್ಟಪ್ ಇಂಡಿಯಾ, ಸ್ಟಾಂಡ್ ಆಫ್ ಇಂಡಿಯಾ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೋರಿದರು.
ಬ್ಯಾಂಕ್ ಆಫ್ ಬರೋಡಾದ ಪ್ರಾದೇಶಿಕ ನಿರ್ದೇಶಕ ಕಪಿಲೇಶ್ ಮಾತನಾಡಿ, ಅಕ್ಟೋಬರ್ನಲ್ಲಿ ಬ್ಯಾಂಕ್ ವಿಲೇವಾರಿಯು ಹೆಚ್ಚಾಗಿರುತ್ತದೆ. ರೈತರು ಸಾಲಕ್ಕಾಗಿ ಬ್ಯಾಂಕ್ನಲ್ಲಿ ಅರ್ಜಿ ಸಲ್ಲಿಸಿದರೆ ಈ ಅವಧಿಯಲ್ಲಿ ವಿಲೇ ಮಾಡುವ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.
ಕೆನರಾ ಬ್ಯಾಂಕ್ನ ಪ್ರಾದೇಶಿಕ ನಿರ್ದೇಶಕ ರಮಾಕಾಂತ್ ಮಾತನಾಡಿ, ಸಾರ್ವಜನಿಕರು ಬ್ಯಾಂಕ್ಗಳು ನೀಡುವ ಸಾಲ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ರೈತರಿಗೆ ಸಾಲ ನೀಡಲು ಬ್ಯಾಂಕ್ ಸಿದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಲಾಯಿತು. ರಾಮನಗರ ತಾಲ್ಲೂಕಿನ ಬನ್ನಿಕುಪ್ಪೆ ಯೂನಿಯನ್ ಬ್ಯಾಂಕ್ ವತಿಯಿಂದ 60 ರೈತರಿಗೆ ಸಾಲ ವಿತರಿಸಲಾಯಿತು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್, ಬನ್ನಿಕುಪ್ಪೆ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಏಳಂಗೋವನ್, ನಗರಸಭೆ ಆಯುಕ್ತ ನಂದಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.