ಮಾಗಡಿ: ತಾಲ್ಲೂಕಿನ ಗ್ರಾಮೀಣ ಪ್ರದೇಶ ಮತ್ತು ಪಟ್ಟಣದಲ್ಲಿ ವಾರದಿಂದ ಕೋವಿಡ್ ಸೋಂಕು ಉಲ್ಬಣವಾಗುತ್ತಿದೆ. ಸಾವಿನ ಸಂಖ್ಯೆಯು ಅಧಿಕವಾಗುತ್ತಿದೆ. ಸೋಂಕು ಉಲ್ಬಣವಾಗುತ್ತಿದ್ದರೂ ಸಹ ಬೆಳಿಗ್ಗೆ ಮಾರುಕಟ್ಟೆಯಲ್ಲಿ ಜನಜಂಗುಳಿ ಸಹ ಕಡಿಮೆಯಾಗುತ್ತಿಲ್ಲ.
ತಾಲ್ಲೂಕಿನಲ್ಲಿ ಭಾನುವಾರ 127 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇಬ್ಬರು ಬಲಿಯಾಗಿದ್ದಾರೆ. ಕೋವಿಡ್ ಸೋಂಕು ಹರಡದಂತೆ ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
ಪೊಲೀಸರು ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರೂ ಸಹ ವಾಹನ ಸವಾರರು ವಿನಾಕಾರಣ ಸುತ್ತುತ್ತಿದ್ದಾರೆ.
ಶಾಸಕ ಎ. ಮಂಜುನಾಥ್ ಅವರಿಗೆ ಸೋಂಕು ದೃಢಪಟ್ಟಿದ್ದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ಮಹೇಶ್ ಎದೆನೋವಿನಿಂದ ಬಳಲುತ್ತಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.