ರಾಮನಗರ: ಜಿಲ್ಲೆಯ ಚನ್ನಪಟ್ಟಣ ನಗರದ ಕೋರ್ಟ್ ಬಳಿ ಇರುವ ಓವರ್ ಹೆಡ್ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಕೆಲವು ಪ್ರದೇಶಗಳಿಗೆ ನೀರು ಪೂರೈಕೆ ಸ್ಥಗಿತಗೊಂಡಿದೆ.
ನೀರಿನ ಟ್ಯಾಂಕ್ ಬಳಿ ಮಹಿಳೆಯ ಬಟ್ಟೆ ಹಾಗೂ ಚಪ್ಪಲಿ ದೊರೆತಿದೆ. ಟ್ಯಾಂಕ್ ಮೇಲೇರಿ ನೀರಿಗೆ ಬಿದ್ದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ನೀರಿನ ರಭಸಕ್ಕೆ ಶವದ ಕೆಲವು ಅಂಗಗಳು ಶನಿವಾರ ಪೈಪ್ ಮೂಲಕ ಕೆಳಗೆ ಬಂದಿವೆ.
ವಿಷಯ ತಿಳಿದ ಕೂಡಲೇ ಟ್ಯಾಂಕ್ ನಿಂದ ನೀರು ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸದ್ಯ ಪೈಪುಗಳನ್ನು ಕತ್ತರಿಸಿ ದೇಹದ ಅಂಗಾಂಗಗಳನ್ನು ಹೊರ ತೆಗೆಯುವ ಕಾರ್ಯಾಚರಣೆ ನಡೆದಿದೆ.
ಎಚ್ಡಿಕೆ ಮಾತುಕತೆ: ವಿಷಯ ತಿಳಿಯುತ್ತಿದ್ದಂತೆ ಚನ್ನಪಟ್ಟಣ ಶಾಸಕ ಎಚ್.ಡಿ. ಕುಮಾರಸ್ವಾಮಿ ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಶವವನ್ನು ಸಂಪೂರ್ಣ ಹೊರ ತೆಗೆದು ಟ್ಯಾಂಕ್ ಅನ್ನು ಸ್ವಚ್ಛಗೊಳಿಸಬೇಕು. ಅಲ್ಲಿಯವರೆಗೆ ಈ ಟ್ಯಾಂಕ್ ನೀರು ಸರಬರಾಜು ಆಗುತ್ತಿದ್ದ ಪ್ರದೇಶಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಅವರು ಸೂಚಿಸಿದರು.