ಕನಕಪುರ (ರಾಮನಗರ): ತೋಟಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ್ದರಿಂದ, ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬರಡನಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಗ್ರಾಮದ ದುಂಡಮ್ಮ (35) ಗಾಯಗೊಂಡರು. ಬೆಳಿಗ್ಗೆ ತೋಟಕ್ಕೆ ಹೋಗುತ್ತಿದ್ದ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಘಟನೆಯಲ್ಲಿ ಅವರ ಎಡಗೈ ಮುರಿದಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.