ಬಿಡದಿ: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಆಡಳಿತ ಮಂಡಳಿಯ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕಾರ್ಖಾನೆಯ ಕಾರ್ಮಿಕರು ಭಾನುವಾರ ಶಾಸಕ ಮಂಜುನಾಥ್ ಅವರಿಗೆ ಆಹ್ವಾನ ನೀಡಿದ್ದಾರೆ.
ಶಾಸಕರನ್ನು ಭೇಟಿ ಮಾಡಿದ ಕಾರ್ಮಿಕರು ಮತ್ತು ನೌಕರರ ನಿಯೋಗವು ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿ, ಹೋರಾಟದಲ್ಲಿ ಪಾಲ್ಗೊಳ್ಳಲು ತಮ್ಮ ಜೊತೆ ಬರುವಂತೆ ಪಟ್ಟು ಹಿಡಿಯಿತು.
‘ಈಗಾಗಲೇ ಶಾಸಕರಾದ ಸುರೇಶ್ ಗೌಡ, ಅನ್ನದಾನಿ ಹಾಗೂ ವಿವಿಧ ಸಂಘಟನೆ, ಸಂಘ, ಸಂಸ್ಥೆಗಳ ಮುಖಂಡರು ನಮ್ಮ ಹೋರಾಟವನ್ನು ಬೆಂಬಲಿಸಿ ಮುಷ್ಕರದಲ್ಲಿ ಭಾಗವಹಿಸಿದ್ದಾರೆ. ಆದರೆ ಸಮಸ್ಯೆ ಮಾತ್ರ ಬಗೆಹರಿದಿಲ್ಲ’ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.
ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕರು, ‘ನಾನು ನಿಮ್ಮ ಜೊತೆ ಇರುತ್ತೇನೆ. ಈ ನಿಮ್ಮ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.
‘ಮಂಗಳವಾರ ಹಲವು ಮುಖಂಡರ ಜತೆ ಚರ್ಚಿಸುತ್ತೇನೆ. ನಿಮ್ಮ ಸಮಸ್ಯೆ, ಬೇಡಿಕೆಗಳ ಪಟ್ಟಿ ಕೊಡಿ. ಕಾರ್ಮಿಕರನ್ನು ಮರಳಿ ಕೆಲಸಕ್ಕೆ ಸೇರಿಸಲು ಪ್ರಯತ್ನಿಸುತ್ತೇನೆ’ ಎಂದು ಕಾರ್ಮಿಕರ ನಿಯೋಗಕ್ಕೆ ಭರವಸೆ ನೀಡಿದರು.