ಬೆಂಗಳೂರು: ತಿರುಪತಿ ತಿರುಮಲ ಟ್ರಸ್ಟ್ ವತಿಯಿಂದ ರಾಮನಗರದಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಿಸಲು 15 ಎಕರೆ ಭೂಮಿ, ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹21 ಕೋಟಿ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇವಾಲಯಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಕುರಿತು ಶುಕ್ರವಾರ ಏರ್ಪಡಿಸಿದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ತಿರುಮಲದಲ್ಲಿ ಭಕ್ತರ ಪ್ರಯೋಜನಕ್ಕಾಗಿ ₹ 26 ಕೋಟಿ ವೆಚ್ಚದಲ್ಲಿ ಛತ್ರ ನಿರ್ಮಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.
ಪ್ರಮುಖ ತೀರ್ಮಾನಗಳು:
lಟಿಟಿಡಿ ಟ್ರಸ್ಟ್ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 15 ಎಕರೆ ಜಮೀನು ಗುರುತಿಸುವುದು.
l ಮಲೆ ಮಹದೇಶ್ವರ ಬೆಟ್ಟದಲ್ಲಿ₹ 40 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿ ಕಾರ್ಯ. ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ದೇವಸ್ಥಾನದ ಮೆಟ್ಟಿಲುಗಳ ದುರಸ್ತಿ.
lಮುಡುಕುತೊರೆ ಶ್ರೀಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವುದು.
l ಮುಂದಿನ ವರ್ಷ ತಲಕಾಡು ಪಂಚಲಿಂಗ ದರ್ಶನ ಆಚರಣೆ ನಡೆಯುವುದರಿಂದ, ಕ್ಷೇತ್ರದಲ್ಲಿ ಮೂಲ ಸೌಕರ್ಯ ವ್ಯವಸ್ಥೆ ಬಲಪಡಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ.