ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‍ಇಪಿ–ಅಧಿವೇಶನದಲ್ಲಿ ಚರ್ಚೆಯಾಗಲಿ

Last Updated 19 ಸೆಪ್ಟೆಂಬರ್ 2020, 16:32 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‍ಇಪಿ) ಸಮಗ್ರ ಚರ್ಚೆಗೆ ಒಳಪಡಿಸಿ, ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ವಿರೋಧ ಪಕ್ಷದ ನಾಯಕರಿಗೆ 'ಶಿಕ್ಷಣ ಸಂರಕ್ಷಿಸಿ ಭಾರತ ಉಳಿಸಿ ಸಮಿತಿ' ಮನವಿ ಮಾಡಿದೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಮಿತಿಯ ಪದಾಧಿಕಾರಿಗಳು ಈ ಕುರಿತು ಶನಿವಾರ ಮನವಿ ಸಲ್ಲಿಸಿದರು.

ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಮರೇಶ ಕಡಗದ, 'ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ನೂತನ ಶಿಕ್ಷಣ ನೀತಿಯ ಕರಡು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ, ಇತರ ಭಾಷೆಗಳಲ್ಲಿ ಇಲ್ಲ. ಸಮವರ್ತಿ ಪಟ್ಟಿಯಲ್ಲಿರುವ ಶಿಕ್ಷಣವನ್ನು ರಾಜ್ಯ ಸರ್ಕಾರಗಳ ಸಹಮತ ಪಡೆಯದೆ, ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ' ಎಂದು ದೂರಿದರು.

'ಈ ನೀತಿಯಲ್ಲಿ ವಿದ್ಯಾರ್ಥಿ ಮತ್ತು ಶೈಕ್ಷಣಿಕ ಅಭಿವೃದ್ಧಿಯ ವಿರೋಧದ ಅಂಶಗಳು ಹೆಚ್ಚಾಗಿವೆ. ಶಿಕ್ಷಣದ ನೇರ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶಿಕ್ಷಣ ಕ್ಷೇತ್ರ ಕುರಿತು ರಾಜ್ಯ ಸರ್ಕಾರಗಳಿಗೆ ಇರುವ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸುತ್ತಿರುವುದನ್ನು ವಿರೋಧಿಸಬೇಕು. ಮಾನ್ಯತೆ ಪಡೆದಿರುವ ಎಲ್ಲ ಭಾಷೆಗಳಿಗೆ ಈ ನೀತಿಯನ್ನು ಅನುವಾದಿಸಬೇಕು' ಎಂದು ಒತ್ತಾಯಿಸಿದರು.

'ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ, ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರ ಬಳಿ ಚರ್ಚಿಸಬೇಕು. ತಿದ್ದುಪಡಿಗೆ ಸಲಹೆಗಳನ್ನು ನೀಡಲು ಕಾಲಾವಕಾಶ ನೀಡಬೇಕು. ವಿಧಾನಮಂಡಲದ ಉಭಯ ಸದನಗಳಲ್ಲಿ ಇದರ ಸಮಗ್ರ ಚರ್ಚೆ ನಡೆಸಬೇಕು. ಎನ್‍ಇಪಿ ಅನುಷ್ಠಾನದ ತಯಾರಿಗಳನ್ನು ಕೈಬಿಡುವಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು' ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT