ಚನ್ನಪಟ್ಟಣ: ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ತಯಾರು ಮಾಡುವ ಕಾರ್ಖಾನೆಗಳಿದ್ದಂತೆ ಎಂದು ಡಿವೈಎಸ್ಪಿ ಮಲ್ಲೇಶ್ ಅಭಿಪ್ರಾಯಪಟ್ಟರು.
ಪಟ್ಟಣದ ಸಾತನೂರು ಸರ್ಕಲ್ನಲ್ಲಿರುವ ಡೇರಾ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ಫಲಿತಾಂಶ ಉತ್ತಮ ಪಡಿಸಲು ಮಾರ್ಗದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಜ್ಞಾನಿಗಳು, ಐಎಎಸ್, ಐಪಿಎಸ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಲ್ಲಿ ಬಹುಪಾಲು ಮಂದಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ಎಂದರು.
‘ಕೇವಲ ವಿದ್ಯಾಭ್ಯಾಸ ಮಾಡುತ್ತೇವೆ ಎಂದು ಪುಸ್ತಕ ಹಿಡಿದರೆ ಸಾಲದು ಪುಸ್ತಕದಲ್ಲಿರುವ ಪ್ರತಿಯೊಂದು ಸಾಲುಗಳು ನಿಮ್ಮ ನೆನಪಿನ ಬುತ್ತಿಯಾಗಿರುವ ಮೆದುಳಿನಲ್ಲಿ ಸೇರಿಕೊಂಡಾಗ ಮಾತ್ರ ಯಾವುದೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.
‘ಏಕಾಗ್ರತೆ, ಶ್ರದ್ಧೆ, ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲ ಎಂಬಂತೆ ಸಾಧಿಸಿ ತೋರಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಉತ್ತಮ ಜೀವನ ರೂಪಿಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.