ಸಾಗರ: ಸರ್ಕಾರಿ ಉರ್ದು ಪ್ರೌಢಶಾಲೆಯೊಂದು ಸತತ ಏಳು ವರ್ಷಗಳ ಕಾಲ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದಿರುವುದು ಸಾಮಾನ್ಯ ಸಾಧನೆಯಲ್ಲ ಎಂದು ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಅನ್ನಪೂರ್ಣ ಅಭಿಪ್ರಾಯಪಟ್ಟರು.
ಇಲ್ಲಿನ ನೆಹರೂ ಮೈದಾನದಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಬಗ್ಗೆ ಬಹುತೇಕ ಪಾಲಕರಲ್ಲಿ ನಕಾರಾತ್ಮಕವಾದ ಭಾವನೆ ಇದೆ. ಆದರೆ, ಅದೆಷ್ಟೋ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತಲೂ ಗುಣಮಟ್ಟದ ಶಿಕ್ಷಣ ನೀಡುತ್ತಿವೆ ಎಂಬುದನ್ನು ಅಲ್ಲಗಳೆಯಲಾಗದು ಎಂದು ಹೇಳಿದರು.
ಕಳೆದ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಸಾಧನೆ ಪ್ರಸ್ತುತ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎನ್ನುವ ಕಾರಣಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಲೆಯ ಮುಖ್ಯಶಿಕ್ಷಕ ದತ್ತಾತ್ರೇಯ ಭಟ್ ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸನಾವುಲ್ಲಾ ಎ.ಆರ್. ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ರಮೇಶ್ ಹೆಗಡೆ ಗುಂಡೂಮನೆ ಉಪಸ್ಥಿತರಿದ್ದರು. ರಮೇಶ್ ಎನ್.ಕೆ. ಸ್ವಾಗತಿಸಿದರು. ಗಣಪತಿ ಎಂ. ವಂದಿಸಿದರು. ಪಾಲಾಕ್ಷಪ್ಪ ಎಸ್.ಎನ್. ನಿರೂಪಿಸಿದರು.