ತೀರ್ಥಹಳ್ಳಿ: ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವ ಹಾಗೂ ಈಡಿಗ ಮತ್ತು 26 ಪಂಗಡಗಳ ಬೃಹತ್ ಜಾಗೃತಿ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದು, ಜಿಲ್ಲೆಯಿಂದ 400 ಬಸ್ಗಳನ್ನು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಿಟ್ಟೂರು ನಾರಾಯಣಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷ ರೇಣುಕಾನಂದ ಸ್ವಾಮೀಜಿ ತಿಳಿಸಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದು, ಸಮುದಾಯದ ಮೂಲ ಸಮಸ್ಯೆಗಳ ಶಾಶ್ವತ ಪರಿಹಾರ ಕುರಿತ ಬೇಡಿಕೆಗಳನ್ನು ಸಲ್ಲಿಸಲಾಗುವುದು. ನಿಗಮದ ನೋಂದಣಿ, ₹ 500 ಕೋಟಿ ಅನುದಾನ ಬಿಡುಗಡೆ, ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ, ಸಿಗಂದೂರು ದೇವಸ್ಥಾನದ ಮೇಲಿನ ಸರ್ಕಾರದ ಹಸ್ತಕ್ಷೇಪಕ್ಕೆ ವಿರೋಧ ಸೇರಿ ವಿವಿಧ ಬೇಡಿಕೆಗಳನ್ನು ಸಲ್ಲಿಸಲಾಗುವುದು ಎಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಈಡಿಗ ಮತ್ತು 26 ಪಂಗಡಗಳಲ್ಲಿ 50 ಸಾವಿರಕ್ಕೂ ಹೆಚ್ಚು ಜನರಿದ್ದೇವೆ. ಆದರೆ, ಸಮುದಾಯ ಬಲಪಡಿಸುವ ಕೆಲಸವಾಗಿಲ್ಲ. ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಹೆಚ್ಚು ಸಮುದಾಯದ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜಿಲ್ಲೆಯಿಂದ ಸಮುದಾಯವನ್ನು ಪ್ರತಿನಿಧಿಸುವ ಎಲ್ಲಾ ಪಕ್ಷಗಳ ಮುಖಂಡರು, ಶಾಸಕರು, ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಆರ್ಯ ಈಡಿಗರ ಸಂಘದ ಅಧ್ಯಕ್ಷ ಮಟ್ಟಿನಮನೆ ರಾಮಚಂದ್ರ, ಜಿಲ್ಲಾ ಸಹ ಕಾರ್ಯದರ್ಶಿ ಹೊದಲ ಶಿವು, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ಟೆಂಕಬೈಲು, ತಾಲ್ಲೂಕು ಅಧ್ಯಕ್ಷ ವಿಶಾಲ್ ಕುಮಾರ್, ಪ್ರಮುಖರಾದ ಮುಡುಬ ರಾಘವೇಂದ್ರ, ಇರೇಗೋಡು ಶ್ರೀಧರ್ಮೂರ್ತಿ ಇದ್ದರು.