ಪ್ರಕೃತಿಯ ಇತರ ಜೀವಿಗಳ ಸಹಜ ಬದುಕಿನ ಮೇಲೆ ಮನುಷ್ಯನ ಹಸ್ತಕ್ಷೇಪ ಎಂಥದ್ದು ಮತ್ತು ಅದಕ್ಕೆ ಪ್ರಕೃತಿ ಕೊಡುವ ತಿರುಗೇಟು ಏನು ಎಂಬುದು ಈ ನಾಟಕದಲ್ಲಿ ಅಡಕವಾಗಿದೆ. ಪಶ್ಚಿಮ ಘಟ್ಟಗಳ ಮೇಲಾಗುವ ಮನುಷ್ಯನ ಯಂತ್ರ ದಾಳಿಗೆ ಹೆದರಿ ಹಕ್ಕಿಗಳು ಕಾಡು ಬಿಡುತ್ತವೆ. ಅಲ್ಲಿಂದ ಶುರುವಾಗುವ ಆ ಜೀವಿಗಳ ಬದುಕು ದಾರುಣವಾಗುತ್ತಾ ಬರುವ ಚಿತ್ರಣ ಈ ನಾಟಕದಲ್ಲಿದೆ. ಕಾರ್ಖಾನೆಯ ವಿಷದ ಹೊಗೆ, ಡೈನಾಮೇಟ್ಗಳ ಸ್ಫೋಟ, ಮುಳುಗಡೆಯ ಪ್ರದೇಶಗಳಿಂದಾಗುವ ಆವಾಂತರ ಹೀಗೆ ಒಂದಾದ ಮೇಲೊಂದು ಅವಘಡಗಳಿಗೆ ಸಿಲುಕಿ ಹಕ್ಕಿಗಳು ಸಾಯುತ್ತವೆ. ಕೊನೆಯಲ್ಲಿ ಮರಗಳ ಕೇಡಿಗೆ ಹೆದರಿ ಮೊಬೈಲ್ ಟವರುಗಳ ಮೇಲೆ ಗೂಡು ಕಟ್ಟುವ ಸ್ಥಿತಿ, ಮನುಷ್ಯನ ಆಧುನಿಕ ಬದುಕಿನ ಕ್ರೌರ್ಯವನ್ನು ವ್ಯಂಗ್ಯವಾಗಿ ತೋರಿಸುತ್ತದೆ. ಅಲ್ಲಿಗೂ ಬರುವ ಮನುಷ್ಯನ ಸ್ವಾರ್ಥ ಬುದ್ಧಿಗೆ ಪ್ರಕೃತಿ ತನ್ನದೇ ರೀತಿಯಲ್ಲಿ ಉತ್ತರಿಸಿ ಬಿಡುತ್ತದೆ. ಇಂತಹ ಸನ್ನಿವೇಶಗಳು ನಾಟಕದಲ್ಲಿ ಚಿತ್ರಿತವಾಗಿದೆ ಎಂದು ವಿವರಿಸಿದರು.