ಸಾಗರ: ‘ಆದಿಕವಿ ಪಂಪ ಕನ್ನಡ ನಾಡು ಕಂಡ ಶ್ರೇಷ್ಠ ಕವಿ. ಪಂಪನ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ನನಗೆ ಲಭಿಸಿರುವುದು ಸಂತಸ ತಂದಿದೆ’ ಎಂದು ಸಾಹಿತಿ ನಾ.ಡಿಸೋಜ ಹೇಳಿದರು.
ಪಂಪ ಪ್ರಶಸ್ತಿಗೆ ಭಾಜನರಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕನ್ನಡ ಭಾಷೆಯ ಸ್ಥಾನಮಾನವನ್ನು ಹೆಚ್ಚಿಸುವಲ್ಲಿ ಪಂಪ ಕವಿ ವಹಿಸಿರುವ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಪ್ರಸ್ತುತ ಕಾಲಮಾನದಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆ ಕಡಿಮೆಯಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲೂ ಇಂಗ್ಲೀಷ್ ವೈಭವೀಕರಣ ಹೆಚ್ಚಾಗುತ್ತಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಾಹಿತಿಗಳ ಮೇಲೆ ಮಾತ್ರ ಇರದೆ, ಪ್ರತಿಯೊಬ್ಬ ಕನ್ನಡಿಗರ ಮೇಲೂ ಇದೆ ಎಂದು ಅವರು ಹೇಳಿದರು.
‘ಕನ್ನಡ ಸಾಹಿತ್ಯಕ್ಕೆ ನಾ.ಡಿಸೋಜ ಅವರು ನೀಡಿರುವ ಕೊಡುಗೆ ಅಮೂಲ್ಯವಾಗಿದೆ. ಬರವಣಿಗೆಯ ಜೊತೆಗೆ ಜನಪರ ಹೋರಾಟಗಳಲ್ಲೂ ತೊಡಗಿರುವ ಅವರಿಗೆ ಪಂಪ ಪ್ರಶಸ್ತಿ ಪುರಸ್ಕಾರ ಸಂದಿರುವುದು ಸಾಗರದ ಗೌರವವನ್ನು ಹೆಚ್ಚಿಸಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಟಿ.ಸ್ವಾಮಿ ಹೇಳಿದರು.