ಸಾಗರ: ‘ಹಿರಿಯರನ್ನು ಗೌರವದಿಂದ ಕಾಣುವುದು ನಮ್ಮ ಸಂಪ್ರದಾಯ. ಈ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲೆ ಇದೆ’ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಹೇಳಿದರು.
ಇಲ್ಲಿನ ಶೃಂಗೇರಿ ಶಂಕರ ಮಠದ ಭಾರತೀತೀರ್ಥ ಸಭಾಭವನದಲ್ಲಿ ನಿವೃತ್ತ ನೌಕರರ ಸಂಘ ಶುಕ್ರವಾರ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಹಿರಿಯರ ಸೇವೆಯನ್ನು ಸದಾ ಸ್ಮರಿಸುವುದು ಕಿರಿಯರ ಕರ್ತವ್ಯ. ನೌಕರರು ಸೇವೆಯಿಂದ ನಿವೃತ್ತರಾದ ಮಾತ್ರಕ್ಕೆ ಖಿನ್ನತೆಗೆ ಒಳಗಾಗುವ ಅಗತ್ಯವಿಲ್ಲ. ಸಾಮಾಜಿಕವಾಗಿ ಕ್ರಿಯಾಶೀಲರಾಗಿದ್ದರೆ ನಿವೃತ್ತಿಯ ನಂತರವೂ ಬದುಕು ಹಸನಾಗಿರುತ್ತದೆ. ಇಲ್ಲಿನ ನಿವೃತ್ತ ನೌಕರರ ಸಂಘದ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯವಿರುವ ನೆರವು ಕಲ್ಪಿಸಲಾಗುವುದು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ‘ಹಿರಿಯರಿಗೆ ಗೌರವ ನೀಡುವುದು ನಮ್ಮ ಸಂಸ್ಕೃತಿಯ ಒಂದು ಭಾಗ. ಊರಿನ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿರುವ ಹಿರಿಯರನ್ನು ನಗರಸಭೆ ಯಾವತ್ತೂ ಗೌರವಿಸುತ್ತ ಬಂದಿದೆ. ವಯಸ್ಸಿನ ಕಾರಣಕ್ಕೆ ಯಾವುದೇ ವ್ಯಕ್ತಿಯನ್ನು ಕಡೆಗಣಿಸುವ ಪ್ರವೃತ್ತಿ ಸರಿಯಲ್ಲ’ ಎಂದರು.
ನಿವೃತ್ತ ನೌಕರ ಎಸ್. ವೆಂಕಟರಮಣ ಆಚಾರ್, ಹಿರಿಯ ವೈದ್ಯ ಡಾ. ವಾಸುದೇವ ಕೋಳಿವಾಡ, ಜಾನಪದ ಕಲಾವಿದೆ ಕೆರೆಯಮ್ಮ ಮುಳಕೇರಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ನಗರಸಭೆ ಉಪಾಧ್ಯಕ್ಷ ವಿ. ಮಹೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಜಿ. ಪರಮೇಶ್ವರಪ್ಪ, ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಿ.ಎಂ. ಚಂದ್ರಶೇಖರ್, ಶೃಂಗೇರಿ ಶಂಕರ ಮಠದ ಧರ್ಮಾಧಿಕಾರಿ ಅಶ್ವಿನಿಕುಮಾರ್, ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಜಿ. ನಾಗೇಶ್ ಇದ್ದರು.