ಭದ್ರಾವತಿ: ‘ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಇಲ್ಲಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದರು.
‘ಕಾನೂನು ಪಾಲನೆಗೆ ಎಲ್ಲರೂ ಒತ್ತು ನೀಡಬೇಕು’ ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಮುಖಂಡರು, ಭದ್ರಾವತಿ ನಗರಸಭೆಯ ಚುನಾಯಿತ ಸದಸ್ಯರು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ಭರವಸೆ ನೀಡಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭುಮರೆಡ್ಡಿ, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಗುರುರಾಜ್ ಮೈಲಾರ್, ಹೊಳೆಹೊನ್ನೂರು ಪೊಲೀಸ್ ಠಾಣೆಯ ನಿರೀಕ್ಷಕ ಲಕ್ಷ್ಮೀಪತಿ ಸಭೆಯಲ್ಲಿ ಇದ್ದರು.