ಶಿವಮೊಗ್ಗ: ಭದ್ರಾವತಿಗೆ ನಗರದ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲು ಚರ್ಚೆ ಹಾಗೂ ಚುನಾವಣೆ
ಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಜನವರಿ 29 ಮತ್ತು 30ರಂದು ಅಲ್ಲಿನ ಬಸವೇಶ್ವರ ಸಭಾ ಭವನದಲ್ಲಿ ಜಿಲ್ಲಾ ಕಾರ್ಯಕಾರಿಣಿ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.
‘ಭದ್ರಾವತಿ ಸೇರಿದಂತೆ ಜಿಲ್ಲೆಯಾದ್ಯಂತ ಪಕ್ಷವು ಸಂಘಟನಾತ್ಮಕವಾಗಿ ಮುಂಚೂಣಿಯಲ್ಲಿದ್ದು, ಕಾರ್ಯಕಾರಿಣಿ ಮೂಲಕ ಕಾರ್ಯಕರ್ತರಲ್ಲಿ ಶಕ್ತಿ ತುಂಬುವ ಕೆಲಸವಾಗುತ್ತಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲವಾಗಿದೆ. ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ಪಕ್ಷದ ಐವರು ಸದಸ್ಯರು ಆಯ್ಕೆಯಾಗಿದ್ದಾರೆ. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 70 ಮಂದಿ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿದ್ದ ಮತಗಳ ಕ್ರೋಢೀಕರಿಸಿದರೆ 28,000ಕ್ಕೂ ಹೆಚ್ಚು ಮತದಾರರು ಬಿಜೆಪಿಯ ಜೊತೆಯಲ್ಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿಗೆ 50,000ಕ್ಕೂ ಹೆಚ್ಚು ಮತಗಳು ಬಂದಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಇಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಸಂಘಟಿಸಲು ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿದೆ’ ಎಂದರು.
‘ಸಭೆಯಲ್ಲಿ ಭದ್ರಾವತಿ ಕ್ಷೇತ್ರದ ಈಗಿನ ಸ್ಥಿತಿಗತಿ, ಸಮಗ್ರ ಅಭಿವೃದ್ಧಿ ಮತ್ತು ಉದ್ಯೋಗವಕಾಶದ ಬಗ್ಗೆ, ಆರಾಜಕತೆ ಹೀಗೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಸಂಸದರು, ಶಾಸಕರು, ಮಂಡಲಗಳ ಅಧ್ಯಕ್ಷರು, ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ವೀಕ್ಷಕರಾಗಿ ಪಾಲ್ಗೊಳ್ಳುತ್ತಿದ್ದಾರೆ. ಜನವರಿ 30ರಂದು ಜಿಲ್ಲಾ ಕೋರ್ ಕಮಿಟಿ ಸಭೆ ನಡೆಯಲಿದೆ. ಭದ್ರಾವತಿ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಲೇಬೇಕೆಂಬ ದೃಢವಾದ ಹೆಜ್ಜೆ ಇಟ್ಟಿದ್ದೇವೆ ಎಂದ ಅವರು, ಫೆ.5 ರಂದು ಶಿವಮೊಗ್ಗದಲ್ಲಿ ನಡೆಯುವ ಪೇಜ್ ಪ್ರಮುಖರ ಸಮಾವೇಶಕ್ಕೆ ಬರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅದೇ ದಿನ ಭದ್ರಾವತಿಯಲ್ಲಿ ಚುನಾವಣಾ ಕಾರ್ಯಾಲಯ ಉದ್ಘಾಟಿಸಲಿದ್ದಾರೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಪ್ರಮುಖರಾದ ಬಿ.ಕೆ.ಶ್ರೀನಾಥ್, ಎಸ್.ಎನ್.ಚನ್ನಬಸಪ್ಪ, ಶಿವರಾಜ್, ಧರ್ಮಪ್ರಸಾದ್, ರಮೇಶ್, ಚಂದ್ರಶೇಖರ್, ವಿನ್ಸೆಂಟ್, ಕೆ.ವಿ.ಅಣ್ಣಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.