ರಿಪ್ಪನ್ಪೇಟೆ: ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ ಕಾರ್ಯಕರ್ತರು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಸಂಸದನಾಗಿ ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸಿರುವೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಉಜ್ವಲ, ಭಾಗ್ಯಲಕ್ಷ್ಮಿ, ಆಯುಷ್ಮಾನ್ ಭಾರತ್ ನಂತರ ಯೋಜನೆಗಳು ಮಹಿಳೆಯರ ಬದುಕು ಹಸನು ಮಾಡಿವೆ ಎಂದು ತಿಳಿಸಿದರು.
ಬಿಜೆಪಿ ಮಹಿಳಾ ರಾಜ್ಯ ಘಟಕದ ಅಧ್ಯಕ್ಷೆ ಮಂಜುಳಾ ಮಾತನಾಡಿ, ‘ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆಯನ್ನು ಸುಳ್ಳು ಮತ್ತು ವಾಮಮಾರ್ಗದ ಮೂಲಕ ಗೆಲ್ಲುಲು ಹುನ್ನಾರ ನಡೆಸುತ್ತಿದೆ’ ಎಂದು ದೂರಿದರು.
ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಬಿ.ಸ್ವಾಮಿ ರಾವ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ, ಮಹಿಳಾ ಅಧ್ಯಕ್ಷೆ ಆಶಾ ರವೀಂದ್ರ, ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಹಾಜರಿದ್ದರು.