ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಲುಗೋಡು ಸಮೀಪದ ದಟ್ಟ ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರು ಹಾಗೂ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಕಾಡಿಗೆ ದರಗು, ಸೌದೆ ತರಲು ಹೋಗಿದ್ದ ಸ್ಥಳೀಯರು ಸುಟ್ಟ ಕಾರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಭಾನುವಾರ ರಾತ್ರಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
‘ಸುಟ್ಟಿರುವ ಕಾರು ಸಾಗರ ತಾಲ್ಲೂಕು ಆನಂದಪುರದ ವ್ಯಕ್ತಿಯೊಬ್ಬರಿಗೆ ಸೇರಿದ್ದು ಎಂಬ ಮಾಹಿತಿ ಲಭಿಸಿದೆ. ಆಕಸ್ಮಿಕವೊ, ಆತ್ಮಹತ್ಯೆ ಅಥವಾ ಕೊಲೆಯೋ ಎಂಬ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಪ್ರತಿಕ್ರಿಯಿಸಿದರು.