ಶಿವಮೊಗ್ಗ: ‘ರಾಜ್ಯದಲ್ಲಿ ವಿವಿಧ ಪಕ್ಷಗಳ ಹಲವು ಮುಖಂಡರು ಬಿಜೆಪಿ ಸೇರುವ ಹಾದಿಯಲ್ಲಿದ್ದಾರೆ. ಅವರು ಸೇರ್ಪಡೆಯಾದ ನಂತರ ನಮಗೆ ಮತ್ತಷ್ಟು ಬಲ ಬರಲಿದೆ’ ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಸುಭದ್ರವಾಗುತ್ತಿದೆ. ಹೀಗಾಗಿ, ಬಿಜೆಪಿಯ ತತ್ವ, ಸಿದ್ಧಾಂತ ಹಾಗೂ ಮೋದಿ ಅವರ ನಾಯಕತ್ವ ಮೆಚ್ಚಿ ಅನೇಕ ಮುಖಂಡರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ ಎಂದು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಮುಖಂಡರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದು, ಎಲ್ಲರನ್ನೂ ಸ್ವಾಗತಿಸುತ್ತೇನೆ. ಪಕ್ಷಕ್ಕೆ ಸೇರುವವರಿಗೆ ಅನುಭವ, ಅರ್ಹತೆ ಆಧಾರದಲ್ಲಿ ಸೂಕ್ತ ಸ್ಥಾನಮಾನ ನೀಡಲು ಪಕ್ಷದಲ್ಲಿ ಚಿಂತನೆ ನಡೆದಿದೆ. ಎಲ್ಲರೊಂದಿಗೆ ಚರ್ಚಿಸಿ, ಅದನ್ನು ಮಾಡಲಾಗುತ್ತದೆ’ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಪಣದಲ್ಲಿ ಬಿಜೆಪಿ ಪಕ್ಷ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.