ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BSY ನಿವಾಸದ ಮೇಲೆ ಕಲ್ಲೆಸೆತದಲ್ಲಿ ಮಾಜಿ ಶಾಸಕರ ಕೈವಾಡ: ಬಿ.ವೈ. ರಾಘವೇಂದ್ರ ಆರೋಪ

Published 23 ಏಪ್ರಿಲ್ 2023, 7:30 IST
Last Updated 23 ಏಪ್ರಿಲ್ 2023, 7:30 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ‘ಮೀಸಲಾತಿ ವಿಚಾರದಲ್ಲಿ ಯಡಿಯೂರಪ್ಪನವರ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ ಶಿವಮೊಗ್ಗ ಗ್ರಾಮಾಂತರದ ಮಾಜಿ ಶಾಸಕರ ಕೈವಾಡವಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದರು.

ಅವರು ಪಟ್ಟಣದ ಭಗೀರಥ ಸಮುದಾಯ ಭವನದಲ್ಲಿ ಕರ್ನಾಟಕ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಸಮಾಜದ ವತಿಯಿಂದ ಶನಿವಾರ ಆಯೋಜಿಸಿದ್ದ ಸರ್ಕಾರಕ್ಕೆ ಅಭಿನಂದನಾ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಮೀಸಲಾತಿ ವಿಚಾರದಲ್ಲಿ ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುವಂತೆ ಅನೇಕ ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದರೂ ಕೆಲವೇ ತಿಂಗಳ ಹಿಂದೆ ಬಿಜೆಪಿ ಸರ್ಕಾರ ಇದಕ್ಕೆ ಅನುಮೋದನೆ ನೀಡಿ, ಯಾವುದೇ ಸಮಾಜಕ್ಕೆ ತೊಂದರೆಯಾಗದ ರೀತಿಯಲ್ಲಿ ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಆದರೆ ತಮ್ಮ ಸರ್ಕಾರ ಬಂದರೆ ಈ ಮೀಸಲಾತಿಯನ್ನು ಹಿಂತೆಗೆದುಕೊಳ್ಳುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡುತ್ತಿದೆ’ ಎಂದು ಆರೋಪಿಸಿದರು.

‘ಬಿ.ಆರ್. ಅಂಬೇಡ್ಕರ್‌ ಅವರು ಕನಸು ಕಂಡಿದ್ದ ಭಾರತವನ್ನು ವಿಶ್ವಗುರು ಮಾಡುವಲ್ಲಿ ಮೋದಿ ಸಾಕಾರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಈ ಹಿಂದಿನ ಕಾಂಗ್ರೆಸ್ ಅವರನ್ನು ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಲ್ಲದೇ, ಅವರ ನಿಧನಾ ನಂತರ ದೆಹಲಿಯಲ್ಲಿ ಹೂಳುವುದಕ್ಕೂ ಸ್ಥಳಾವಕಾಶ ನೀಡದೇ ಅವಮಾನ ಮಾಡಿದೆ’ ಎಂದು ಕಿಡಿ ಕಾರಿದರು.

‘ಸಂವಿಧಾನ ನೀಡಿದಂಥ ಮಹಾತ್ಮನಿಗೆ ಭಾರತ ರತ್ನ ನೀಡಲು ಅಟಲ್ ಜೀಯವರ ಬಿಜೆಪಿ ಸರ್ಕಾರ ಬರಬೇಕಾಯಿತು. ಅವರು ಲಂಡನ್‌ನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಕಾಲೇಜನ್ನು ₹ 800 ಕೋಟಿಗೆ ತೆಗೆದುಕೊಂಡು ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಪಂಗಡದವರಿಗೆ ಉಚಿತ ವಿದ್ಯಾಭ್ಯಾಸ ನೀಡಲು ಅನುಕೂಲ ಮಾಡಿಕೊಡಲಾಗಿದೆ’ ಎಂದರು.

‘ಈ ಬಾರಿ 10 ರಿಂದ 15 ಕ್ಷೇತ್ರಗಳನ್ನು ಒಗ್ಗೂಡಿಸಿ ಮೋದಿಯವರ ಕಾರ್ಯಕ್ರಮ ಇರುತ್ತದೆ. ಜಿಲ್ಲೆಯಲ್ಲಿ ಈ ಅದೃಷ್ಟ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಒಲಿಯಬಹುದು. ಆದ್ದರಿಂದ ಕಾರ್ಯಕರ್ತರು ಇಂದಿನಿಂದಲೇ ಪಕ್ಷ ಸಂಘಟನೆಗೆ ಒತ್ತು ನೀಡಬೇಕು’ ಎಂದು ಹೇಳಿದರು.

‘ಸಂವಿಧಾನದ ಪ್ರಕಾರ ಹಿಂದುಳಿದ ವರ್ಗಗಳಿಗೆ ಕಳೆದ 60 ವರ್ಷಗಳಿಂದ ಶೇ 3ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಆದರೆ ಹಿಂದುಳಿದ ವರ್ಗಗಳ ಜನಸಂಖ್ಯೆ ಹೆಚ್ಚಾಗಿದ್ದರಿಂದ ರಾಜ್ಯ ಸರ್ಕಾರ ಮೀಸಲಾತಿಯನ್ನು ಹೆಚ್ಚು ಮಾಡಿದೆ. ಆದರೆ ಕೆಲವು ನಾಯಕರು ರಾಜಕೀಯ ದುರುದ್ದೇಶದಿಂದ ಜನರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಮೀಸಲಾತಿಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯ’ ಎಂದು ಶಾಸಕ ಕೆ.ಬಿ. ಅಶೋಕ ನಾಯ್ಕ, ಹೇಳಿದರು.

ಕೆ.ಎಸ್.ಡಿ.ಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ, ಕ್ಷೇತ್ರದ ಉಸ್ತುವಾರಿ ಮುಕೇಶ್ ಹುಲ್ಲಿ, ಮಹಾದೇವಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಕಲ್ಲಜ್ಜನಾಳ್ ಮಂಜುನಾಥ, ಉಪಾಧ್ಯಕ್ಷ ಸುಬ್ರಮಣಿ, ಜಗದೀಶ್ ಗೌಡ್ರು, ನಾಗಣ್ಣ, ತಿಪ್ಪೇಶಪ್ಪ, ಪಾಲಕ್ಷಪ್ಪ, ಸುಧಾಮಣಿ ಬೋರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT