ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗಕ್ಕೆ ಭೇಟಿ ನಿಮಿತ್ತ ಮಂಗಳವಾರ ಕಾಂಗ್ರೆಸ್ನ ಹಲವು ಮುಖಂಡ ಮನೆ ಎದುರು ಪೊಲೀಸರನ್ನು ನಿಯೋಜಿಸಲಾಗಿತ್ತು.
ಮುಖ್ಯಮಂತ್ರಿ ಕಾರ್ಯಕ್ರಮ ಮುಗಿಯುವವರೆಗೂ ಮನೆಯಿಂದ ಹೊರಬರುವಂತಿಲ್ಲ ಎಂದು ತಾಕೀತು ಮಾಡಿದ ಪೊಲೀಸರು ಅವರು ಮನೆಯಿಂದ ಬಾಗಿಲು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮೊದಲನೇ ಆರೋಪಿಯಾಗಿದ್ದು, ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದ ಕಾಂಗ್ರೆಸ್ ಕಾರ್ಯಕರ್ತರು ಅವರ ರಾಜೀನಾಮೆ ನಂತರ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿರುವ ಸಂದರ್ಭದಲ್ಲೇ ಈಶ್ವರಪ್ಪ ಅವರ ಸ್ವಕ್ಷೇತ್ರ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮವಾ ಗುತ್ತಿರುವುದರಿಂದಾಗಿ ಪ್ರತಿಭಟನೆ ಇನ್ನಷ್ಟು ಕಾವು ಪಡೆದುಕೊಳ್ಳಬಹುದು ಎಂಬ ಉದ್ದೇಶದಿಂದ ಪೊಲೀಸರು ಮುಂಜಾಗ್ರತೆ ನೆಪದಲ್ಲಿ ಈ ಕ್ರಮ ಅನುಸರಿಸಿದ್ದಾರೆ.
ಯುವ ಕಾಂಗ್ರೆಸ್ ವಿರೋಧ:
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ರಾಜಕೀಯ ಪಕ್ಷಗಳ ಹಕ್ಕು. ಆದರೆ, ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಭಟನೆ ನಡೆಸುವ ರಾಜಕೀಯ ಮುಖಂಡರನ್ನು ಗೃಹಬಂಧನದಲ್ಲಿ ಇರಿಸುವುದು ಎಷ್ಟರಮಟ್ಟಿಗೆ ಸರಿ? ಹೋರಾಟಗಾರರ ಹತ್ತಿಕ್ಕುವಂತಹ ಕೆಲಸವನ್ನು ಭಷ್ಟ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಕೆ. ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ. ಗಿರೀಶ್, ಯುವ ಕಾಂಗ್ರೆಸ್ ಮುಖಂಡರಾದ ಎಂ.ಪ್ರವೀಣ್ ಕುಮಾರ್, ಲೋಕೇಶ್, ಕುಮರೇಶ್ ಆರೋಪಿಸಿದ್ದಾರೆ.
ಎನ್ಎಸ್ಯುಐ ಪ್ರತಿಭಟನೆ:
ಕಾಂಗ್ರೆಸ್ ಪ್ರಮುಖರ ಮನೆಗಳ ಮುಂದೆ ಪೊಲೀಸರನ್ನು ನಿಯೋಜಿಸಿ ಅವರು ಮನೆಯಿಂದ ಹೊರಹೋಗದಂತೆ ತಡೆದರೂ ಎನ್ಎಸ್ಯುನ ಕೆಲ ಮುಖಂಡರು ಸಿ.ಜಿ. ಮಧುಸೂಧನ್, ವಿಜಯ್, ಚೇತನ್, ಶ್ರೀಜಿತ್, ಗಿರೀಶ್ ಕಾಟಿಕೆರೆ, ಚರಣ್, ಗೌತಮ್ ಮುಂತಾದವರ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಪೊಲೀಸರು ಯಾವುದೇ ಪ್ರತಿಭಟನೆ ನಡೆಸದಂತೆ ಮುನ್ನೆಚ್ಚರಿಕೆ ವಹಿಸಿದ್ದರೂ ಎನ್ಎಸ್ಯುಐ ಕಾರ್ಯಕರ್ತರ ದಿಢೀರ್ ಪ್ರತಿಭಟನೆಯಿಂದ ಪೊಲೀಸ್ ಇಲಾಖೆಗೆ ಮುಜುಗರ ಉಂಟಾಗಿತ್ತು. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಕಾವಲಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.