ತೀರ್ಥಹಳ್ಳಿ: ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಬೆಂಗಳೂರು ಹಾಗೂ ಇತರೆ ಭಾಗಗಳಿಂದ ತಾಲ್ಲೂಕಿಗೆ ವಾಪಸಾಗುವ ಜನರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಊರಿಗೆ ಬಂದವರು ಮನೆಯಲ್ಲಿಯೇ ಸ್ವಯಂ ಕ್ವಾರಂಟೈನ್ ಆಗಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಸೂಚಿಸಿದರು.
ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
‘ಲಾಕ್ಡೌನ್ ಆದೇಶಕ್ಕೆ ಒಳಪಟ್ಟ ಕಾರಣ ತೀರ್ಥಹಳ್ಳಿ, ಹೊಸನಗರ ಭಾಗದ ಅನೇಕರು ಬೆಂಗಳೂರಿನಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಊರಿಗೆ ವಾಪಸಾಗುತ್ತಿದ್ದು, ಹೊರ ಸಂಪರ್ಕದಿಂದ ದೂರ ಉಳಿದುಕೊಳ್ಳುವಂತೆ ಮನವಿ ಮಾಡಿಕೊಳ್ಳಬೇಕಿದೆ’ ಎಂದು ಹೇಳಿದರು.
ತಹಶೀಲ್ದಾರ್ ಡಾ.ಎಸ್.ಬಿ. ಶ್ರೀಪಾದ್, ‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮ ನಡೆಸಬೇಕಿದೆ. ಊರಿಗೆ ವಾಪಸಾದವರ ಕುರಿತು ಖಚಿತ ಮಾಹಿತಿ ಪಡೆದು ಗಂಟಲದ್ರವ ಪರೀಕ್ಷೆ ಮಾಡಬೇಕು. ಹೋಂ ಕ್ವಾರಂಟೈನ್ ಆಗುವುದು ಅನಿವಾರ್ಯವಾಗಿದ್ದು, ಪ್ರತಿಯೊಬ್ಬರೂ ಆಡಳಿತದೊಂದಿಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಮೂರ್ತಿ, ಎಪಿಎಂಸಿ ಅಧ್ಯಕ್ಷ ಸಾಲೇಕೊಪ್ಪ ರಾಮಚಂದ್ರ, ಟಿಎಪಿಸಿಎಂಎಸ್ ಅಧ್ಯಕ್ಷ ನಾಗರಾಜ ಶೆಟ್ಟಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಅಶೋಕ್, ತಾಲ್ಲೂಕು ಪಂಚಾಯಿತಿ ಇಒ ಆಶಾಲತಾ, ಸಿಪಿಐ ಪ್ರವೀಣ್ ನೀಲಮ್ಮನವರ್ ಇದ್ದರು.