ಸಾಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಗ್ರರ ಪರವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದ ಪ್ರಮುಖ ಬೀದಿಗಳಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿನ ಆರೋಪಿ ಅಮಾಯಕ ಎನ್ನುವ ಅರ್ಥ ಬರುವ ರೀತಿಯಲ್ಲಿ ಡಿ.ಕೆ.ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷ ಉಗ್ರರ ಪರವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಯೊಬ್ಬರು ಈ ರೀತಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಪ್ರತಿಭಟನಕಾರರು ದೂರಿದರು.
ಕಾಂಗ್ರೆಸ್ ಮುಖಂಡರು ಅಲ್ಪಸಂಖ್ಯಾತರನ್ನು ಓಲೈಸುವ ಕಾರಣಕ್ಕೆ ಇಲ್ಲಸಲ್ಲದ ಹೇಳಿಕೆ ನೀಡುವುದನ್ನು ಅಭ್ಯಾಸ ಮಾಡಿಕೊಂಡು ಬಂದಿದ್ದಾರೆ. ತಮ್ಮ ಮತ ಬ್ಯಾಂಕ್ ರಾಜಕಾರಣವನ್ನು ಮರೆಮಾಚುವ ಸಲುವಾಗಿ ಬಿಜೆಪಿ ಧರ್ಮ ದ್ವೇಷವನ್ನು ಹರಡುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಸುಳ್ಳುಹೇಳುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್, ನಗರ ಘಟಕದ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್, ಪ್ರಮುಖರಾದ ಮಧುರಾ ಶಿವಾನಂದ್, ವಿ.ಮಹೇಶ್, ಅರವಿಂದ್ ರಾಯ್ಕರ್, ಮೈತ್ರಿ ಪಾಟೀಲ್, ಸಂತೋಷ್ ಶೇಟ್, ರಾಧಾಕೃಷ್ಣ ಬೇಂಗ್ರೆ, ಎಂ.ಆರ್.ಮಹೇಶ್, ಗೌತಮ್ ಇದ್ದರು.