ಶಿವಮೊಗ್ಗ: ಕಾಂಗ್ರೆಸ್ನದ್ದು ಜನಪರ, ಪ್ರಗತಿಪರ ಹಾಗೂ ನುಡಿದಂತೆ ನಡೆಯುವ ಸರ್ಕಾರ ಎಂಬುದನ್ನು ಚುನಾವಣೆಗೆ ಮುನ್ನ ಕೊಟ್ಟಿದ್ದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಾಬೀತು ಪಡಿಸಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಹೇಳಿದರು.
ಜಿಲ್ಲಾ ಎನ್.ಎಸ್.ಯು.ಐ. ಹಾಗೂ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.
ಐದು ವರ್ಷಗಳ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಜನಪರ ಸುಭದ್ರ ಸರ್ಕಾರ ನಡೆಸಿ, ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿದ್ದರು. ಅದೇ ಮಾರ್ಗದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿಯೂ ನಡೆದು, ಮತ್ತೊಮ್ಮೆ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ರಾಜ್ಯದಲ್ಲಿ ಪ್ರಗತಿಪರ ಭರವಸೆಗಳನ್ನು ಜನರ ಮುಂದಿಟ್ಟು ಗೆಲುವು ಸಾಧಿಸಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನ ಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ 5 ಗ್ಯಾರಂಟಿ ಭರವಸೆಗಳನ್ನು ಜನರ ಮುಂದಿಟ್ಟು ಮತಯಾಚನೆ ಮಾಡಿತ್ತು. ಜನರು ಕಾಂಗ್ರೆಸ್ ಪಕ್ಷದ ಮೇಲಿನ ನಂಬಿಕೆಯಿಂದ ಮತ ಚಲಾಯಿಸಿ, ಅಧಿಕಾರವನ್ನು ನೀಡಿದ್ದಾರೆ. ಅವರ ನಂಬಿಕೆಯನ್ನುಈಗ ಉಳಿಸಿಕೊಂಡಿದೆ ಎಂದರು.
ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಮಾತನಾಡಿ, ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ 5 ಗ್ಯಾರಂಟಿಗಳನ್ನು ಈಡೇರಿಸಲು ತೀರ್ಮಾನ ತೆಗೆದುಕೊಂಡಿದ್ದು, ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದರು.
ಈ ಸಂಧರ್ಭದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಷ, ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ವಿಜಯ್, ಎಸ್.ಪಿ ದಿನೇಶ್, ಆರಿಫ್, ರವಿ ಕಾಟಿಕೆರೆ, ಹರ್ಷಿತ್, ಗಿರೀಶ್, ಮಲಗೊಪ್ಪ ಶಿವು, ಅಕ್ಬರ್, ಚಂದ್ರೋಜಿ ರಾವ್, ರವಿ,ಚರಣ್, ಸಾಗರ್, ಆಕಾಶ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಅಬ್ದುಲ್ ಸತ್ತರ್, ಅನ್ನು, ಹುಸೇನ್, ಬಸವರಾಜ್ ಇದ್ದರು.