ಶಿವಮೊಗ್ಗ: ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಇ.ಡಿ (ಜಾರಿ ನಿರ್ದೇಶನಾಲಯ)ಯಂತಹ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿರುವ ಆದಾಯ ತೆರಿಗೆ (ಐ.ಟಿ) ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಈ ವೇಳೆಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಸೇರಿ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದರು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೇಂದ್ರದ ಬಿಜೆಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಇ.ಡಿ ಮೂಲಕ ನೋಟಿಸ್ ಕೊಡಿಸಿದೆ ಎಂದು ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಈವರೆಗೂ ಒಂದೇ ಒಂದು ಉದ್ಯೋಗ ಸೃಷ್ಟಿ ಮಾಡಿಲ್ಲ. ಸರ್ಕಾರಿ ಉದ್ಯಮಗಳನ್ನು ಖಾಸಗಿಯವರಿಗೆ ಮಾರುತ್ತ ದಿನೇ ದಿನೆ ನಿರುದ್ಯೋಗ ಸೃಷ್ಟಿಸುತ್ತಿದೆ. ಈಗ ‘ಅಗ್ನಿವೀರ್’ ಯೋಜನೆ ಮೂಲಕ ದೇಶದ ಸೈನ್ಯದ ವ್ಯವಸ್ಥೆಯನ್ನೇ ಹಾಳುಗೆಡವಲು ಹೊರಟಿದೆ. ಇದನ್ನೆಲ್ಲ ಜನರಿಂದ ಮರೆಮಾಚಲು ಕಾಂಗ್ರೆಸ್ ನಾಯಕರ ಮೇಲೆ ಇ.ಡಿ ಅಸ್ತ್ರ ಪ್ರಯೋಗಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಕಿಮ್ಮನೆ ರತ್ನಾಕರ, ಆರ್.ಎಂ.ಮಂಜುನಾಥಗೌಡ, ಚಂದ್ರ ಭೂಪಾಲ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಎಚ್.ಸಿ.ಯೋಗೀಶ್, ಕೆ.ರಂಗನಾಥ್, ಎಚ್.ಪಿ.ಗಿರೀಶ್, ಜಿ.ಡಿ.ಮಂಜುನಾಥ್, ಎನ್.ಡಿ.ಪ್ರವೀಣ್, ಕುಮರೇಶ್, ಸುವರ್ಣ ನಾಗರಾಜ್, ನಾಜೀಮಾ, ಪ್ರೇಮಾ ಇದ್ದರು.