ಸಾಗರ: ‘ಅಲ್ಪಸಂಖ್ಯಾತರ ತುಷ್ಠೀಕರಣ ನೀತಿ ಕಾರಣಕ್ಕೆ ಅಪರಾಧಿಗಳಿಗೆ ರಕ್ಷಣೆ ನೀಡುವ ಕೆಲಸವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮಾಡುತ್ತಿದೆ’ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದ್ದಾರೆ.
ಸಮೀಪದ ಮಂಕಳಲೆ ಗ್ರಾಮದಲ್ಲಿ ಭಾನುವಾರ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ಸೋತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸೋಲುಣಿಸುವ ಮೂಲಕ ಸರ್ಕಾರಕ್ಕೆ ಪಾಠ ಕಲಿಸಬೇಕಿದೆ’ ಎಂದರು.
‘ವಿಧಾನ ಪರಿಷತ್ ಎಂಬುದು ಚಿಂತಕರ ಚಾವಡಿ ಇದ್ದಂತೆ. ಹಲವು ಮೌಲಿಕ ವಿಚಾರಗಳ ಕುರಿತು ಅಲ್ಲಿ ಗಂಭೀರವಾದ ಚರ್ಚೆ ನಡೆಯುತ್ತವೆ. ಇಂತಹ ಚರ್ಚೆ ನಡೆಸುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಕಾರಣ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಗಳನ್ನು ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ಬಿಜೆಪಿಯ ಪ್ರಮುಖರಾದ ದೇವೇಂದ್ರಪ್ಪ ಯಲಕುಂದ್ಲಿ, ರಾಜೇಶ್ ಮಾವಿನಸರ, ವ.ಶಂ.ರಾಮಚಂದ್ರಭಟ್, ಕೆ.ಎನ್.ಶ್ರೀಧರ್, ಹು.ಭಾ.ಅಶೋಕ್, ರಮೇಶ್ ಹಾರೆಗೊಪ್ಪ, ಗಿರೀಶ್ ಎನ್. ಹೆಗಡೆ ಇದ್ದರು.