ಭದ್ರಾವತಿ: ‘ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಬೇಕು. ಶಾಲಾ ಸ್ವಚ್ಛತೆಗಾಗಿ ಸಿಬ್ಬಂದಿ ನೇಮಿಸುವ ಮೂಲಕ ಶಿಕ್ಷಕರಿಗೆ ಆಗುತ್ತಿರುವ ಒತ್ತಡ ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಚೆಗೆ ಮನವಿ ಸಲ್ಲಿಸಲಾಯಿತು.
ಪ್ರಾಥಮಿಕ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಶೌಚಾಲಯ ಮತ್ತು ಶಾಲಾ ಸ್ವಚ್ಛತೆಗೆ ಪ್ರತ್ಯೇಕ ಸಿಬ್ಬಂದಿ ಇಲ್ಲ. ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗಾಗಿ ವಿದ್ಯಾರ್ಥಿಗಳನ್ನು ಬಳಸಿದ ಪ್ರಕರಣಗಳಲ್ಲಿ ಕೆಲ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಬೇಕು. ಶೀಘ್ರ ಸಿಬ್ಬಂದಿ ನೇಮಕ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಪದಾಧಿಕಾರಿಗಳಾದ ಎಸ್.ಕೆ. ಮೋಹನ್, ಶ್ರೀಧರ್ ಗೌಡ, ಭಾರತಿ, ಹನುಮಂತಪ್ಪ, ಸುಮತಿ ಕಾರಂತ್, ಮಾಯಮ್ಮ, ಲೋಲಾಕ್ಷಿ, ಕೋಕಿಲ ಶಿವಕುಮಾರ್ ಇದ್ದರು.