ಶಿವಮೊಗ್ಗ: ಇಲ್ಲಿನ ಗೌರಿಗದ್ದೆಯ ವಿನಯ್ ಗುರೂಜಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿನಯ್ ಗುರೂಜಿ ಭಕ್ತವೃಂದದವರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
‘ವಿನಯ್ ಗುರೂಜಿಯವರು ಈ ನಾಡಿನ ಧಾರ್ಮಿಕ ನಾಯಕರಾಗಿದ್ದಾರೆ. ಈ ದೇಶದ ಸಂಸ್ಕೃತಿ ಎತ್ತಿ ಹಿಡಿಯುತ್ತಿದ್ದಾರೆ. ನಾಡಿನಾದ್ಯಂತ ಅಲ್ಲದೆ ದೇಶ-ವಿದೇಶಗಳಲ್ಲೂ ಭಕ್ತರಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಇತ್ತೀಚೆಗೆ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ’ ಎಂದು ದೂರಿದರು.
ಗುರು ನಿಂದನೆ ಕೊನೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಈ ಷಡ್ಯಂತ್ರದ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.