ಶಿವಮೊಗ್ಗ:ಆಡಳಿತ ಪಕ್ಷ ಗಟ್ಟಿಯಾದಂತೆ ವಿರೋಧ ಪಕ್ಷವೂ ಗಟ್ಟಿಯಾದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನೇಕ ರಾಜ್ಯಗಳಲ್ಲಿ ವಿರೋಧ ಪಕ್ಷಗಳೇ ಇಲ್ಲದಂತಾಗಿದೆ. ದೇಶದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್ ದಿನೇ ದಿನೇ ನಶಿಸಿ ಹೋಗುತ್ತಿದ್ದು, ವಿರೋಧ ಪಕ್ಷ ಇಲ್ಲದಿರುವುದು ಪ್ರಜಾಪ್ರಭುತ್ವದ ಅಣಕ’ ಎಂದು ಟೀಕಿಸಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ಚಿಟ್ ನೀಡಿರುವ ಬಗ್ಗೆ ಸಿದ್ಧರಾಮಯ್ಯ ಅವರು ತನಿಖಾ ವರದಿ ನೋಡದೇ ಕ್ಲೀನ್ಚಿಟ್ ನೀಡಲಾಗಿದೆ ಎಂದು ಟೀಕೆ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.
ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಕ್ಷೇತ್ರವನ್ನು ಪುತ್ರ ವಿಜಯೇಂದ್ರರಿಗೆ ಬಿಟ್ಟು ಕೊಡುವುದಾಗಿ ಘೋಷಿಸಿರುವುದು ರಾಜ್ಯದ ಮತ್ತು ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಂಡ ತೀರ್ಮಾನ. ಈ ಬಗ್ಗೆ ಕೇಂದ್ರದ ವರಿಷ್ಠರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ.ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಕೇಂದ್ರ ನಾಯಕರು ಒಪ್ಪಿಗೆ ನೀಡುತ್ತಾರೆ ಎಂಬ ವಿಶ್ವಾಸದಿಂದ ಹೇಳಿಕೆ ನೀಡಿರಬಹುದು. ಈ ಬೆಳವಣಿಗೆ ಪಕ್ಷದಲ್ಲಿ ಯಾವುದೇ ಗೊಂದಲ ಹುಟ್ಟಿಸುವುದಿಲ್ಲ. ಒಂದು ವೇಳೆ ಗೊಂದಲವಿದ್ದರೂ ಅದನ್ನು ಸರಿಪಡಿಸುವ ಶಕ್ತಿ ಪಕ್ಷಕ್ಕಿದೆ ಎಂದು ಹೇಳಿದರು.