ಶಿವಮೊಗ್ಗ: ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಎಂದು ಆಗ್ರಹಿಸಿ, ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ ಜಿಲ್ಲೆಯಲ್ಲೂ ರೈತರು ಶನಿವಾರ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಸಾಗರ ರಸ್ತೆಯ ಗಾಡಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದ ರೈತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ಬಂದ್ ಮಾಡಿದ ಪರಿಣಾಮ ಶಿವಮೊಗ್ಗ-ಸಾಗರ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು. ಪೊಲೀಸರು ಪರ್ಯಾಯ ರಸ್ತೆಗಳ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಖಾಸಗಿ, ಸರಕಾರಿ ಬಸ್ಗಳ ಸಂಚಾರಕ್ಕೆ ಕೆಲವು ಸಮಯ ಅಡಚಣೆಯಾಯಿತು. ಸ್ಥಳದಲ್ಲಿ ಹೆಚ್ವಿನ ಪೊಲೀಸ್ ನಿಯೋಜಿಸಲಾಗಿತ್ತು. ಅಹಿಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.
ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕಿದ್ದ ಸರ್ಕಾರ ಕಾಯಿದೆಗಳಿಗೆ ತಿದ್ದುಪಡಿ ತಂದು ರೈತರಿಗೆ ಅನ್ಯಾಯ ಮಾಡುತ್ತಿದೆ. ದೆಹಲಿ ಗಡಿಭಾಗದ ಹೆದ್ದಾರಿಗಳಲ್ಲಿ ಕಾಂಕ್ರಿಟ್ ಗೋಡೆಗಳನ್ನು ನಿರ್ಮಿಸಿದೆ. ಕಬ್ಬಿಣದ ಮೊಳೆಗಳನ್ನು ರಸ್ತೆಗೆ ಅಳವಡಿಸಿದೆ ಎಂದು ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
26ರಂದು ರೈತರ ಹೋರಾಟ ಹಮ್ಮಿಕೊಂಡಿದ್ದ ದಿನ ಕೆಲವು ಸರ್ಕಾರಿ ಪ್ರಾಯೋಜಿತ ಕಿಡಿಗೇಡಿಗಳು ಕೆಂಪು ಕೋಟೆ ಮೇಲೆ ಅನ್ಯ ಧ್ವಜ ಹಾರಿಸುವ ಮೂಲಕ ರೈತ ಚಳವಳಿಗೆ ಕಳಂಕ ತರುವ ಕೆಲಸ ಮಾಡಿದ್ದಾರೆ. ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಳ್ಳಬೇಕು. ಬಂಧಿಸಿರುವ ಅಮಾಯಕ ರೈತರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಮುಖಂಡರಾದ ಎಚ್.ಆರ್.ಬಸವರಾಜಪ್ಪ, ಕೆ.ರಾಘವೇಂದ್ರ, ಇ.ಬಿ.ಜಗದೀಶ್, ಎಸ್.ಶಿವಮೂರ್ತಿ, ಸಿ.ಚಂದ್ರಪ್ಪ, ಕಸಟ್ಟಿ ರುದ್ರೇಶ್, ಹಿಟ್ಟೂರು ರಾಜು, ಕಾಂಗ್ರೆಸ್ ಮುಖಂಡ ಎನ್. ರಮೇಶ್, ದಸಂಸ ಜಿಲ್ಲಾ ಸಂಚಾಲಕ ಟಿ.ಎಚ್.ಹಾಲೇಶಪ್ಪ, ಜನಶಕ್ತಿ ಸಂಘಟನೆಯ ಕೆ.ಎಲ್.ಅಶೋಕ್, ಶಿವಕುಮಾರ್ ಭಾಗವಹಿಸಿದ್ದರು.