ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ಪ್ರಯಾಣಕ್ಕೆ ಐದು ಮಾರ್ಗ: ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ

ರಫ್ತುದಾರರ ಸಮಾವೇಶದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ
Last Updated 23 ಸೆಪ್ಟೆಂಬರ್ 2021, 4:08 IST
ಅಕ್ಷರ ಗಾತ್ರ

ಶಿವಮೊಗ್ಗ: ಉಡಾನ್ ಯೋಜನೆಯಡಿ ಶೇ 50 ಸಬ್ಸಿಡಿ ದರದಲ್ಲಿ ಪ್ರಯಾಣಿಸಲು ಮಂಗಳೂರು-ಶಿವಮೊಗ್ಗ, ದೆಹಲಿ-ಶಿವಮೊಗ್ಗ, ಮುಂಬೈ-ಶಿವಮೊಗ್ಗ ಸೇರಿ ಐದು ಮಾರ್ಗ ನೀಡಲಾಗಿದೆ ಎಂದುಸಂಸದ ಬಿ.ವೈ. ರಾಘವೇಂದ್ರ ಮಾಹಿತಿ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ರಫ್ತುದಾರರ ಸಮಾವೇಶ, ರಫ್ತು ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ಸಂಕಷ್ಟದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಭಿವೃದ್ಧಿಗೆ ಕೊರತೆಯಾಗದಂತೆ ಎಲ್ಲರ ಸಹಕಾರ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ರಸ್ತೆ, ರೈಲು, ವಾಯು ಮಾರ್ಗಗಳಿಗೆ ಜಿಲ್ಲೆಯಲ್ಲೂ ಆದ್ಯತೆ ದೊರೆತಿದೆ. ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಆಗಿದೆ. ರಫ್ತು ಮತ್ತು ಕೈಗಾರಿಕಾಭಿವೃದ್ಧಿಗೆ ಅವಶ್ಯವಾದ ವಿಮಾನ ನಿಲ್ದಾಣವಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 20,294 ಕೈಗಾರಿಕಾ ಘಟಕಗಳಿವೆ. ₹ 2,646 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿದೆ. ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ವಿಐಎಸ್‌ಎಲ್‌, ಎಂಪಿಎಂ ಪುನರಾರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶಿವಮೊಗ್ಗದಿಂದ 90 ಕಿ.ಮೀ. ದೂರದ ಬೈಂದೂರು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸೇರಿದೆ. ಅಲ್ಲಿ ಬಂದರು ನಿರ್ಮಿಸಲು ಪ್ರಯತ್ನಿಸಲಾಗುವುದು. ರಫ್ತಿಗಾಗಿ ವಿಶೇಷ ಕ್ರೂಸ್‍ಗಳ ಓಡಾಟಕ್ಕೆ ಅವಕಾಶ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ‘ಹಿಂದೆಲ್ಲ ಕೈಗಾರಿಕಾ ಕೇಂದ್ರಗಳು ಲಾಭ ಮಾಡಿಕೊಳ್ಳುವ ಸಂಸ್ಥೆಗಳಾಗಿದ್ದವು. ಸರ್ಕಾರ ಯೋಜನೆ ರೂಪಿಸಿದ್ದರೂ ಪರಿಣಾಮಕಾರಿ ಅನುಷ್ಠಾನದ ಕೊರತೆ ಇತ್ತು. ಕೇಂದ್ರ ಸರ್ಕಾರ ಕೈಗಾರಿಕೆಗಳ ಅಭಿವೃದ್ಧಿಗೆ ಉತ್ತಮ ಯೋಜನೆಗಳು ಜಾರಿಗೆ ತಂದಿದೆ. ಅನುಷ್ಠಾನಕ್ಕೆ ಶ್ರಮಿಸುತ್ತಿದೆ. 2020-25ರ ಕೈಗಾರಿಕಾ ನೀತಿ ಜಾರಿಗೆ ಮುನ್ನ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚಿಸುವುದು ಒಳಿತು ಎಂದು ಅಭಿಪ್ರಾಯಪಟ್ಟರು.

ಜಿಎಸ್‍ಟಿ ಕುರಿತು ಅತಿ ಹೆಚ್ಚಿನ ಜಾಗೃತಿ ಮೂಡಿಸುವಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳ ಪಾತ್ರವಿದೆ. ಜಿಎಸ್‍ಟಿ ಅನುಷ್ಠಾನ, ಸಮಸ್ಯೆಗಳು ಮತ್ತು ಈ ಸಮಸ್ಯೆಗಳನ್ನು ಸರಿದೂಗಿಸುವ ಕೆಲಸವನ್ನು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸದಸ್ಯರು ಮಾಡಿ
ದ್ದಾರೆ. ಅ.30ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‍ ಅವರಿಂದ ಗೌರವಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಮಯದಲ್ಲಿ ಕೈಗಾರಿಕೆಯಲ್ಲಿ ಉತ್ತಮ ಸಾಧನೆ ತೋರಿದ ಶಾಂತಲಾ ಮತ್ತು ಮಲೆನಾಡು ಅಲಾಯ್ಸ್ ಕಂಪನಿಯ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್. ವಾಸುದೇವ್ ಸ್ವಾಗತಿಸಿದರು. ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿ ಎಂ.ಎ. ರಮೇಶ್ ಹೆಗ್ಡೆ, ಮಂಡ್ಲಿ-ಕಲ್ಲೂರು ಕೈಗಾರಿಕಾ ಪ್ರದೇಶದ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಘೇವರ್‌ಚಂದ್‌, ಸಾಗರ ರಸ್ತೆ ಕೈಗಾರಿಕಾ ವಸಾಹತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಉಮೇಶ್ ಶಾಸ್ತ್ರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT