ಸಾಗರ: ರೈತ ವಿರೋಧಿ, ಜನ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರವೇ ರೈತರು ಕೃಷಿಯಿಂದ ವಿಮುಖರಾಗಲು ಪ್ರೋತ್ಸಾಹ ನೀಡುತ್ತಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವ್ಯಂಗ್ಯವಾಡಿದರು.
ತಾಲ್ಲೂಕಿನ ತಾಳಗುಪ್ಪ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಶನಿವಾರ ಏರ್ಪಡಿಸಿದ್ದ ರೈತ ಸಮಾವೇಶದಲ್ಲಿ ಮಾತನಾಡಿದರು.
ಉಳುವವನೇ ಹೊಲದೊಡೆಯ ಎಂಬ ಘೋಷಣೆಯ ಮೂಲಕ ರೈತರಿಗೆ ಭೂಮಿಯ ಹಕ್ಕು ದೊರಕಿದ್ದು ಇತಿಹಾಸದಲ್ಲಿ ದಾಖಲಾಗಿರುವ ಮಹತ್ವದ ಸಂಗತಿ. ಆದರೆ ಈಗಿನ ಬಿಜೆಪಿ ಸರ್ಕಾರ ಕಾನೂನಿಗೆ ತಿದ್ದುಪಡಿ ತರುವ ಮೂಲಕ ಭೂ ಸುಧಾರಣೆಯ ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿದೆ ಎಂದುಟೀಕಿಸಿದರು.
ಆಹಾರ ಧಾನ್ಯಗಳ ಹೊರತಾಗಿ ಮಿಕ್ಕ ಎಲ್ಲಾ ಉತ್ಪನ್ನಗಳ ಬೆಲೆ ದಿನೇದಿನೇ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ರೈತರ, ಜನರ ಬಗ್ಗೆ ಕನಿಷ್ಠ ಕಾಳಜಿ ಇದ್ದಿದ್ದರೆ ಬೆಲೆ ಏರಿಕೆಗೆ ಕಡಿವಾಣ ಹಾಕಲು ಪ್ರಯತ್ನ ಮಾಡುತ್ತಿತ್ತು. ಆದರೆ ಸರ್ಕಾರಕ್ಕೆ ಕಂಪನಿಗಳ ಹಿತಾಸಕ್ತಿಯನ್ನು ಕಾಯುವ ಆಸಕ್ತಿ ಇದೆಯೆ ಹೊರತು ರೈತರ ಬಗ್ಗೆ ಆಸಕ್ತಿ ಇಲ್ಲ ಎಂದು ದೂರಿದರು.
ಏಪ್ರಿಲ್ 21ರಂದುಬೆಂಗಳೂರಿನಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಒಕ್ಕಲುತನ ಉಳಿಯಬೇಕು ಎಂದಾದರೆ ಸರ್ಕಾರ ಕಾಯ್ದೆಗಳನ್ನು ರದ್ದುಗೊಳಿಸಲೇಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲು ಸಮಾವೇಶ ಏರ್ಪಡಿಸಲಾಗಿದೆ ಎಂದು ತಿಳಿಸಿದರು.