ಸೊರಬ: ಸರ್ಕಾರಿ ನೌಕರರಿಗೆ ಶಾಪವಾಗಿರುವ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ನಿಶ್ಚಿತ ಪಿಂಚಣಿ ಜಾರಿಗೊಳಿಸುವ ಮೂಲಕ ರಾಜ್ಯ ಸರ್ಕಾರಿ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸುವ ಬಗ್ಗೆ ಮನವೊಲಿಸಲಾಗುವುದು ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಸರ್ಕಾರಿ ನೌಕರರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಗ್ರಾಮೀಣ ಕೃಪಾಂಕ ನೀಡಿ ಉದ್ಯೋಗ ಕಲ್ಪಿಸಿದರು. ಜೊತೆಗೆ ವಿವಿಧ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದ ನೌಕರರನ್ನು ಕಾಯಂಗೊಳಿಸಿದರು. ಈ ಕಾರಣಕ್ಕಾಗಿಯೇ ರಾಜ್ಯದ ಸರ್ಕಾರಿ ನೌಕರರಿಗೆ ಬಂಗಾರಪ್ಪ ಅವರ ಮೇಲೆ ಬಹಳ ಪ್ರೀತಿಯಿತ್ತು ಎಂದು ಸ್ಮರಿಸಿದರು.
ತಹಶೀಲ್ದಾರ್ ಹುಸೇನ್ ಸರಕಾವಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಓಟೂರು ಅಧ್ಯಕ್ಷತೆ ವಹಿಸಿದ್ದರು.
ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ, ತಾಲ್ಲೂಕು ಗೌರವಾಧ್ಯಕ್ಷ ವಿಶ್ವನಾಥ್, ಕಾರ್ಯದರ್ಶಿ ಸದಾನಂದ, ತಹಶೀಲ್ದಾರ್ ಹುಸೇನ್ ಸರಕಾವಸ್, ಇಒ ಪ್ರದೀಪಕುಮಾರ್, ಸಹಾಯಕ ಕೃಷಿ ಅಧಿಕಾರಿ ಕೆ.ಜಿ.ಕುಮಾರ್, ಬಾಲಚಂದ್ರಪ್ಪ, ಸತ್ಯನಾರಾಯಣ, ಆಶಾ ಸೇರಿದಂತೆ ವಿವಿಧ ಇಲಾಖಾ ನೌಕರರು ಹಾಜರಿದ್ದರು.