ಶಿವಮೊಗ್ಗ: ಬೇರು ಮಟ್ಟದಲ್ಲಿ ಸಂಘಟನೆ ಮಾಡುವ ಮೂಲಕ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ತಿಳಿಸಿದರು.
ಇಲ್ಲಿನ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಚುನಾವಣೆಗಳ ಪೂರ್ವಭಾವಿ ಸಂಘಟನಾ ಸಭೆಯಲ್ಲಿ ಅವರು ಮಾತನಾಡಿದರು.
ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಆದ ಅಭಿವೃದ್ಧಿ ಕಾರ್ಯಗಳು, ಜನಪರ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಬೇಕು. ಈ ಮೂಲಕ ಜನರ ವಿಶ್ವಾಸ ಗಳಿಸಿ ಮುಂಬರುವ ಎಲ್ಲಾ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಯತ್ನಿಸಬೇಕು. ಇದು ತಳಮಟ್ಟದಿಂದಲೇ ಆಗಬೇಕು ಎಂದು ತಿಳಿಸಿದರು.
ಪಕ್ಷದೊಳಗೆ ಯಾರು ಯಾವುದೇ ಮನಸ್ತಾಪಗಳು ಇಟ್ಟುಕೊಳ್ಳದೇ ಪಕ್ಷಕ್ಕಾಗಿ ದುಡಿಯಬೇಕು. ಸಂಘಟನೆ ಬಲಗೊಂಡರೆ ಪಕ್ಷ ಅಧಿಕಾರಕ್ಕೆ ಬರುವುದಲ್ಲಿ ಯಾವುದೇ ಅನುಮಾನ ಬೇಡ. ಅಧಿಕಾರಕ್ಕೆ ಆಸೆ ಪಡದೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡರೆ ಸ್ಥಾನಮಾನಗಳು ತಾನಾಗಿಯೇ ಒಲಿಯುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಪ್ರಮುಖರಾದ ಪಾಲಿಕೆ ಸದಸ್ಯ ನಾಗರಾಜ್ ಕಂಕಾರಿ, ನಿಂಗಯ್ಯ, ರಾಮಕೃಷ್ಣ, ಚಾಬುಸಾಬ್, ಅಬ್ದುಲ್ ವಾಜಿದ್, ಪಾಲಾಕ್ಷಿ, ರಾಜಮ್ಮ, ತ್ಯಾಗರಾಜ್, ಶಿವಾನಾಯ್ಕ್, ಕಾಂತರಾಜ್, ಸಿದ್ದಪ್ಪ ಬಳಿಗಾರ್ ಇದ್ದರು.