ಶಿವಮೊಗ್ಗ: ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿ ವೇಗ ಪಡೆದಿದ್ದು, ವರ್ಷದ ಒಳಗೆ ವಿಮಾನಗಳ ಹಾರಾಟಕ್ಕೆ ಸಿದ್ಧವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹೊರವಲಯದ ಸೋಗಾನೆ ಬಳಿ ₹ 384 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವಿಮಾನನಿಲ್ದಾಣ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಮೊದಲ ಹಂತದಲ್ಲಿ ರನ್ವೇ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿವೆ. ಈಗಾಗಲೇ 1.7ಕಿ.ಮೀ. ರನ್ವೇ ಕೆಲಸ ಮುಗಿದಿದೆ. ಎರಡನೇ ಹಂತದಲ್ಲಿ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಬೇಕಿದೆ. ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ. ಎಲ್ಲಾ ಕಾಮಗಾರಿಗಳನ್ನು ಏಕಕಾಲಕ್ಕೆ ಸೂಚನೆ ನೀಡಲಾಗಿದೆ. ಅನುದಾನಕ್ಕೆ ಕೊರತೆ ಇಲ್ಲ. ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ತ್ವರಿತವಾಗಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಮಗಾರಿ ತ್ವರಿತಕ್ಕೆ ಜಲ್ಲಿ ಪೂರೈಸಲು ಆವರಣದಲ್ಲೇ 4ಎಕರೆ ಕ್ವಾರಿ ಒದಗಿಸಲಾಗಿದೆ. ತೆಗೆದ ಕ್ವಾರಿಯನ್ನು ವ್ಯವಸ್ಥಿತವಾಗಿ ಮುಚ್ಚಿಸಲಾಗುವುದು. ಎರಡು ತಿಂಗಳ ಬಳಿಕ ಮತ್ತೆ ಕಾಮಗಾರಿ ವೀಕ್ಷಿಸಲಾಗುವುದು. ರಾತ್ರಿ ವಿಮಾನಗಳ ಇಳಿಯುವಿಕೆಗೂ ವ್ಯವಸ್ಥೆ ಮಾಡಲಾಗವುದು. ಈ ಭಾಗದ ಕೈಗಾರಿಕೆ. ಪ್ರವಾಸೋದ್ಯಮ ಬೆಳವಣಿಗೆ ಸಹಕಾರಿಯಾಗಲಿದೆ ಎಂದರು.
ಕೇಂದ್ರ ಕ್ರೀಡಾ ಸಚಿವರ ಭೇಟಿ:
ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಲ್ಲಿ ಕ್ರೀಡಾ ಸೌಕರ್ಯ ಅಭಿವೃದ್ಧಿಪಡಿಸಲು ಹಲವಾರು ಯೋಜನೆ ಕೈಗೊಳ್ಳಲಾಗಿದೆ. ದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಫೆ.21ರಂದು ಶಿವಮೊಗ್ಗ ಆಗಮಿಸುವರು. ಸಹ್ಯಾದ್ರಿ ಕಾಲೇಜಿನಲ್ಲಿ ₹ 4 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಹಾಗೂ ಸ್ಮಾರ್ಟ್ಸಿಟಿ ಯೋಜನೆಯ ₹ 4 ಕೋಟಿ ಕಾಮಗಾರಿಗಳಿಗೆ ಅವರು ಶಂಕು ಸ್ಥಾಪನೆ ನೆರವೇರಿಸುವರು. ಶಿವಮೊಗ್ಗದಲ್ಲಿ ವಿಶೇಷ ಕ್ರೀಡಾ ವಲಯ ಸ್ಥಾಪನೆ ಸ್ಥಳ ಪರಿಶೀಲನೆ ನಡೆಸುವರು ಎಂದು ಮಾಹಿತಿ ನೀಡಿದರು.
ಶಾಸಕ ಕೆ.ಬಿ.ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು,ಮೇಯರ್ ಸುವರ್ಣಾ ಶಂಕರ್, ಉಪ ಮೇಯರ್ ಸುರೇಖಾ ಮುರುಳೀಧರ್ ಉಪಸ್ಥಿತರಿದ್ದರು.