ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗದಲ್ಲಿ ಕೆಸಿಎ ಕ್ರೀಡಾ ಕೇಂದ್ರ

Last Updated 1 ಮೇ 2022, 6:21 IST
ಅಕ್ಷರ ಗಾತ್ರ

ಶಿವಮೊಗ್ಗ: ಕ್ರೀಡಾ ಕೇಂದ್ರ ಸ್ಥಾಪನೆಗೆ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ₹ 25 ಕೋಟಿ ನೀಡಲಿದೆ ಎಂದು ಕೆಸಿಎ ಖಜಾಂಚಿ ವಿನಯ್ ಮೃತ್ಯುಂಜಯ ಹೇಳಿದರು.

ರಾಜ್ಯ ಕ್ರಿಕೆಟ್ ಅಸೋಸಿಯೇಷನ್ 2002ರಲ್ಲಿ ಆರಂಭವಾಗಿದೆ. ಕ್ರಿಕೆಟ್‌ ಪ್ರತಿಭೆಗಳನ್ನು ಗುರುತಿಸಿ, ಬೆಳಕಿಗೆ ತರುತ್ತಿದೆ. ಮಕ್ಕಳಿಗೆ ಹೆಚ್ಚಿನ ಅವಕಾಶ ನೀಡಲು 14, 16 ಹಾಗೂ 19 ಒಳಗಿನ ಮಕ್ಕಳಿಗೆ ಪ್ರತ್ಯೇಕವಾಗಿ ತರಬೇತಿ ನೀಡಲಾಗುತ್ತಿದೆ. ಬೆಂಗಳೂರಿನಿಂದ ಹೊರಗೆ ಧಾರವಾಡ, ಮಂಗಳೂರು, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರುಗಳಲ್ಲಿ 6 ಹೊಸ ವಲಯಗಳನ್ನು ಆರಂಭಿಸಲಾಗಿದೆ. ಈ ಎಲ್ಲಾ ಅಕಾಡೆಮಿಗಳು ಪ್ರಶಿಕ್ಷಣಾರ್ಥಿಗಳಿಗೆ ಲಭ್ಯವಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿವೆ. ನುರಿತ ತರಬೇತುದಾರರು ಇದ್ದಾರೆ. ಬೌಲಿಂಗ್ ಮತ್ತು ಬ್ಯಾಟಿಂಗ್ ವಿಭಾಗದಲ್ಲಿ ಉತ್ತಮ ತರಬೇತಿ ನೀಡಲಾಗುತ್ತದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ವರ್ಷಪೂರ್ತಿ ಕಾರ್ಯನಿರ್ವಹಿಸುವ ಕನಿಷ್ಠ 10 ಅಕಾಡೆಮಿಗಳನ್ನು ರಾಜ್ಯದ ವಿವಿಧೆಡೆ ತೆರೆಯಲಾಗುವುದು. ಶಿವಮೊಗ್ಗ, ಮೈಸೂರಿನಲ್ಲಿ ವಿಶೇಷ ಶಿಬಿರ ಆಯೋಜಿಸಲಾಗುವುದು. ಮಹಿಳಾ ಕ್ರಿಕೆಟ್‌ ಪ್ರೋತ್ಸಾಹಿಸಲಾಗುವುದು. ತರಬೇತುದಾರರಿಗೆ ಆದ್ಯತೆ ನೀಡಲಾಗುವುದು. ಕ್ರಿಕೆಟ್ ತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಕಾಡೆಮಿಯ ತರಬೇತುದಾರರು ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದರು.

ಕೆಸಿಎ ಸಂಚಾಲಕ ಡಿ.ಎಸ್. ಅರುಣ್ ಮಾತನಾಡಿ, ‘ನವುಲೆ ಕ್ರೀಡಾಂಗಣದಲ್ಲಿ ಮಳೆಗಾಲದಲ್ಲಿ ಹೆಚ್ಚು ನೀರು ನಿಲ್ಲುತ್ತಿದೆ. ನೀರು ಸರಾಗವಾಗಿ ಹರಿದು ಹೋಗಲು ಬಸಿ ಕಾಲುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ‘ಸೂಡಾ’ ಹಾಗೂ ನಗರ ಪಾಲಿಕೆಯಿಂದ ಅನುಮತಿ ಪಡೆದು ನೀರು ನಿಲ್ಲದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ನವುಲೆ ಕೆರೆಯ ಹೂಳು ತೆಗೆಸಲಾಗುವುದು. ಚರಂಡಿ ನೀರು ಕೆರೆಗೆ ಸೇರದಂತೆ ‘ಸ್ಮಾರ್ಟ್‌ ಸಿಟಿ’ ಯೋಜನೆ ಅಡಿ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿ ಮುಗಿದ ನಂತರ ಕೆರೆ ಸೌಂದರ್ಯೀಕರಣ ಕಾಮಗಾರಿ ಕೈಗೊಳ್ಳಲಾಗುವುದು’ ಎಂದರು.

ಕೆಸಿಎ ಉಪಾಧ್ಯಕ್ಷ ಎಚ್. ಅಭಿರಾಮ್, ಶಿವಮೊಗ್ಗ ವಲಯದ ಅಧ್ಯಕ್ಷ ರಾಜೇಂದ್ರ ಕಾಮತ್, ವಲಯ ಸಂಯೋಜಕ ಮಂಜುನಾಥ ರಾಜು, ಉಸ್ತುವಾರಿ ಎನ್. ಗಿರೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT