ಕನ್ನಡದ ಕಂಪು ಪ್ರಪಂಚಕ್ಕೆ ಹರಡಲಿ: ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಆಶಯ

ಶಿವಮೊಗ್ಗ: ‘ಕನ್ನಡನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಕುರಿತು ಅಭಿಮಾನವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಕನ್ನಡದ ಕಂಪನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಬೇಕು’ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಭಾಷೆಗಳಲ್ಲಿಯೇ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಕನ್ನಡ ಭಾಷೆಯ ಮಹತ್ವವನ್ನು ಸಾರಿ ಹೇಳುತ್ತದೆ. ತನ್ನದೇ ಆದ ಸ್ವಂತ ಲಿಪಿ, ಸಂಖ್ಯೆಗಳು, ವ್ಯಾಕರಣ ಮತ್ತು ಬರೆಯುವಂತೆಯೇ ಉಚ್ಚರಿಸಲಾಗುವ ಜಗತ್ತಿನ ಅತ್ಯಂತ ಪ್ರಾಚೀನ ಭಾಷೆ ಕನ್ನಡ ಎಂದು ಬಣ್ಣಿಸಿದರು.
ಕನ್ನಡ ನಾಡು ನುಡಿಗೆ ಸಾಕಷ್ಟು ಮಹಾನ್ ವ್ಯಕ್ತಿಗಳ ಕೊಡುಗೆ ಇದೆ. ಹೊಸಪೀಳಿಗೆಯ ಯುವಜನರೂ ಜಾಗತಿಕ ಮಟ್ಟದ ಆಲೋಚನೆಗಳು, ಆವಿಷ್ಕಾರಗಳು ಮತ್ತು ಚಟುವಟಿಕೆಯನ್ನು ಕೈಗೊಳ್ಳುವ ಮೂಲಕ ಕರ್ನಾಟಕದ ಅಸ್ಮಿತೆಯನ್ನು ಜಗತ್ತಿಗೆ ಪರಿಚಯಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ಕುಲಸಚಿವೆ ಜಿ. ಅನುರಾಧ ಮಾತನಾಡಿ, ‘ವಿಶ್ವವಿದ್ಯಾಲಯದಲ್ಲಿ ಆಡಳಿತ ನಡೆಸುವ ಸಂದರ್ಭದಲ್ಲಿ, ಪತ್ರ ವ್ಯವಹಾರಗಳು, ಸುತ್ತೋಲೆಗಳು, ಅಧಿಸೂಚನೆಗಳು ಹೀಗೆ ದೈನಂದಿನ ವ್ಯವಹಾರದಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡತನವನ್ನು ಜೀವಂತವಾಗಿಡಲಾಗಿದೆ’ ಎಂದರು.
ಪರೀಕ್ಷಾಂಗ ಕುಲಸಚಿವ ಪ್ರೊ.ಸಿ.ಎಂ. ತ್ಯಾಗರಾಜ್, ಪ್ರೊ.ಎನ್.ಡಿ. ವಿರೂಪಾಕ್ಷ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.