ಶಿವಮೊಗ್ಗ: ಶಿಕ್ಷಣ ಸಚಿವ ಮಧುಬಂಗಾರಪ್ಪಗೆ ಬಳಸುವ ಭಾಷೆಯ ಮೇಲೆ ಹಿಡಿತ ಅಗತ್ಯ. ರಾಜಕಾರಣ ಮಾಡಲು ರೀತಿ-ನೀತಿ ಇದೆ. ಸಾಮಾನ್ಯ ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ಜಿಲ್ಲೆಯು ಪ್ರಜ್ಞಾವಂತರ ನೆಲ. ಇಲ್ಲಿ ಎಲ್ಲವನ್ನೂ ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ. ಜನಪ್ರತಿನಿಧಿಗಳಾದವರು ಜನರ ಭಾವನೆಗೆ ಧಕ್ಕೆ ಉಂಟಾಗದಂತೆ ನಡೆದುಕೊಳ್ಳಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜಕೀಯದಲ್ಲಿ ಟೀಕೆ-ಟಿಪ್ಪಣಿ ಸಹಜ. ಆದರೆ, ಟೀಕಿಸುವ ಭರದಲ್ಲಿ ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಸವಾಲುಗಳಿದ್ದು, ಪರಿಹರಿಸಲು ಮಧುಬಂಗಾರಪ್ಪ ಒತ್ತು ನೀಡಲಿ ಎಂದರು.
ರಾಜ್ಯದಲ್ಲಿ ಬರಗಾಲದ ಛಾಯೆ ಅವರಿಸಿದೆ. ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ ಹೆಚ್ಚಿದೆ. ರೈತರು ಆತ್ಮಹತ್ಯೆ ಯತ್ನಕ್ಕೆ ಮುಂದಾಗುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡು ಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬಗ್ಗೆ ತಾತ್ಸಾರ ಮನೋಭಾವ ಹೊಂದಿದ್ದಾರೆ. ಕೇವಲ ರಾಜಕಾರಣಕ್ಕೆ ಮಾತ್ರ ಸರ್ಕಾರ ಸೀಮಿತಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಕ್ಷೇತ್ರದ ಚೌಕಟ್ಟು ಬಿಟ್ಟು ಹೊರಬರುತ್ತಿಲ್ಲ. ರಾಜ್ಯದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು.
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಸೋಲುವ ಭೀತಿ ಕಾಂಗ್ರೆಸ್ ನಾಯಕರಿಗೆ ಕಾಡುತ್ತಿದೆ. ಆದಕಾರಣ ಮಧುಬಂಗಾರಪ್ಪ ಅವರು ಬೇರೆಯವರ ಹೆಗಲ ಮೇಲೆ ಬಂದೂಕು ಇಟ್ಟು ಗುಂಡು ಹಾರಿಸುವ ಯತ್ನ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಅವರಿಗೇ ನಂಬಿಕೆ ಇಲ್ಲ ಎಂದು ಟೀಕಿಸಿದರು.
ಜಿಲ್ಲೆಯಲ್ಲಿ ಮೋದಿ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ತಿಳಿಸಿದರು.
ಶಾಸಕ ಎಸ್.ಎನ್.ಚೆನ್ನಬಸಪ್ಪ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವರಾಜ್, ಮಾಲತೇಶ್, ಪ್ರಮುಖರಾದ ಆರ್.ಕೆ.ಸಿದ್ದರಾಮಣ್ಣ, ಜ್ಞಾನೇಶ್, ಕೆ.ವಿ.ಅಣ್ಣಪ್ಪ, ಎಸ್.ಎಸ್.ಜ್ಯೋತಿ ಪ್ರಕಾಶ್, ಕೆ.ವಿ.ಅಣ್ಣಪ್ಪ ಉಪಸ್ಥಿತರಿದ್ದರು.