ಸೊರಬ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಗುಣಮಟ್ಟದ ಶಿಕ್ಷಣ ದೊರೆಯಲಿ ಎಂಬ ಉದ್ದೇಶದೊಂದಿಗೆ ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳಲ್ಲಿ 600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ತಾಲ್ಲೂಕಿನ ಜಡೆ ಗ್ರಾಮದ ಸಿದ್ಧವೃಷಬೇಂದ್ರ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ಸಸ್ಯಶ್ಯಾಮಲ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೆಪಿಎಸ್ ತೆರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಲವು ಹೊಂದಿದ್ದಾರೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದರು.
‘ಸರ್ಕಾರ ಅವಕಾಶ ಕಲ್ಪಿಸಿದ್ದರಿಂದ ಶಿಕ್ಷಣ ಇಲಾಖೆಯಲ್ಲಿ 32,000 ಶಿಕ್ಷಕರು ವರ್ಗಾವಣೆ ಹೊಂದಿದ್ದಾರೆ. ಹೊಸದಾಗಿ ಶಿಕ್ಷಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡ ನಂತರ ನೇಮಕಾತಿ ಆದೇಶ ನೀಡಲಾಗುವುದು’ ಎಂದು ತಿಳಿಸಿದರು.
ಸಸ್ಯಶ್ಯಾಮಲ ಕಾರ್ಯಕ್ರಮದಡಿ ರಾಜ್ಯದ ಶಾಲೆಗಳ ಆವರಣದಲ್ಲಿ 50 ಲಕ್ಷ ಸಸಿಗಳನ್ನು ನೆಡಲಾಗುವುದು. ಈ ಕಾರ್ಯಕ್ರಮ ಇನ್ನಷ್ಟು ಯಶಸ್ವಿಯಾಗಲು ಅರಣ್ಯ ಸಚಿವರು ಹೆಚ್ಚುವರಿಯಾಗಿ 10 ಲಕ್ಷ ಸಸಿಗಳನ್ನು ನೀಡಲು ಸಿದ್ಧರಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.