ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಸದಸ್ಯರ ಆಕ್ರೋಶ

ಅಮೃತ ನಗರೋತ್ಥಾನ ಪ್ರಗತಿ ಪರಿಶೀಲನಾ ಸಭೆ; ಅಭಿವೃದ್ಧಿ ಕಾಮಗಾರಿಗಳ ಪೂರ್ಣಗೊಳಿಸಲು ಆಗ್ರಹ
Published 10 ನವೆಂಬರ್ 2023, 13:12 IST
Last Updated 10 ನವೆಂಬರ್ 2023, 13:12 IST
ಅಕ್ಷರ ಗಾತ್ರ

ಭದ್ರಾವತಿ: ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗುತ್ತಿದ್ದು, ಇದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಕಾಮಗಾರಿಗಳನ್ನು ತಕ್ಷಣ ಆರಂಭಿಸದೆ ನಿರ್ಲಕ್ಷ್ಯ ವಹಿಸಿರುವ ಹಾಗೂ ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಗರಸಭಾ ಸದಸ್ಯರು ಆಗ್ರಹಿಸಿದರು.

ನಗರಸಭೆ ಸಭಾಂಗಣದಲ್ಲಿ ಗುರುವಾರ ಅಧ್ಯಕ್ಷೆ ಶ್ರುತಿ ಸಿ. ವಸಂತಕುಮಾರ್ ಕೆ.ಜಿ. ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿ ಅಮೃತ ನಗರೋತ್ಥಾನ– 4ರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದಸ್ಯರು ನಗರಸಭೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರು.

ಬಿ.ಕೆ.ಮೋಹನ್ ಸೇರಿದಂತೆ ಹಲವು ಸದಸ್ಯರು ಕಾಮಗಾರಿಗಳ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕೆಲವು ಗುತ್ತಿದಾರರು ಗುತ್ತಿಗೆ ಪಡೆದು ಕಾಮಗಾರಿ ಆರಂಭಿಸದಿರುವುದು ಕಂಡುಬಂದಿದೆ. ಇಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ವಿಳಂಬವಾಗಿರುವ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ಕೆಲವು ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ‘ಇಂತಹ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲವೇ’ ಎಂದು ಪೌರಾಯುಕ್ತರನ್ನು ಪ್ರಶ್ನಿಸಿದರು.

ನಗರಸಭೆ ಸದಸ್ಯರ ಮಾತುಗಳನ್ನು ಆಲಿಸಿದ ಪೌರಾಯುಕ್ತ ಎಚ್.ಎಂ.ಮನುಕುಮಾರ್, ‘ಅಧಿಕಾರಿಗಳು ಜನಪ್ರತಿನಿಧಿಗಳನ್ನು ದಿಕ್ಕುತಪ್ಪಿಸದೆ ಸರಿಯಾಗಿ ಮಾಹಿತಿ ನೀಡಿ. ನಮ್ಮ ಬಳಿ ಒಂದು ರೀತಿ ಹೇಳಿಕೆ, ಜನಪ್ರತಿನಿಧಿಗಳ ಬಳಿ ಒಂದು ರೀತಿ ಹೇಳಿಕೆ ನೀಡಬಾರದು. ಉತ್ತಮ ಕೆಲಸಗಾರರನ್ನು ನೇಮಿಸಿಕೊಂಡು ಕೆಲಸ ಬೇಗ ಮುಗಿಸಿ’ ಎಂದು ತಾಕೀತು ಮಾಡಿದರು.

ನಗರೋತ್ಥಾನ– 4ರ ಪ್ರಗತಿ ಕುರಿತು ಮಾಹಿತಿ ನೀಡಿದ ಎಚ್.ಎಂ.ಮನುಕುಮಾರ್, ‘11,875 ಮೀ. ಡಾಂಬರ್ ರಸ್ತೆ, 10,138 ಮೀ. ಕಾಂಕ್ರೀಟ್ ರಸ್ತೆ, 29,791 ಮೀ. ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು ₹ 18.5 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದುವರೆಗೂ 3,546 ಮೀ. ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಕಾರ್ಯಪಾಲಕ ಎಂಜಿನಿಯರ್‌ ವಹೀದಾ ಬೇಗಂ, ‘2023– 24ರ ಅಮೃತ್ ನಗರೋತ್ಥಾನ ಯೋಜನೆಯಡಿ ವಿದ್ಯುತ್ ಕಾಮಗಾರಿಗಳಿಗೆ ₹ 3.38 ಕೋಟಿ ಅನುದಾನ ಮಂಜೂರಾಗಿದ್ದು, ₹ 1.60 ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ’ ಎಂದು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಸದಸ್ಯ ಬಿ.ಕೆ.ಮೋಹನ್, ‘ಬೇರೆ ತಾಲ್ಲೂಕುಗಳಲ್ಲಿ ಬೀದಿ ದೀಪಗಳ ಅಳವಡಿಕೆ ಉತ್ತಮವಾಗಿದೆ. ಆದರೆ, ಭದ್ರಾವತಿಯಲ್ಲಿ ನಕ್ಷೆ ತಯಾರಿಕೆಯೇ ಅವೈಜ್ಞಾನಿಕವಾಗಿದೆ. ಝಡ್ ಮಾದರಿಯಲ್ಲಿ ಬೀದಿದೀಪ ಅಳವಡಿಸುವ ಬದಲು ಒಂದೇ ಬದಿಯಲ್ಲಿ ಅಳವಡಿಸಿರುವುದು ನಗರದ ಅಂದವನ್ನು ಕೆಡಿಸಿದೆ’ ಎಂದು ದೂರಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಸರ್ವಮಂಗಳಾ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್ ಉಪಸ್ಥಿತರಿದ್ದರು. ನಗರಸಭೆ ಸದಸ್ಯರಾದ ವಿ. ಕದಿರೇಶ್, ಬಿ.ಟಿ.ನಾಗರಾಜ್, ಲತಾ ಚಂದ್ರಶೇಖರ್, ಚನ್ನಪ್ಪ, ಮಣಿ ಎಎನ್‌ಎಸ್, ಜಾರ್ಜ್, ಆರ್.ಮೋಹನ್ ಕುಮಾರ್, ಉದಯ ಕುಮಾರ್, ಟಿಪ್ಪು ಸುಲ್ತಾನ್, ಬಷೀರ್ ಅಹಮದ್, ರಿಯಾಜ್ ಅಹಮದ್, ಕೋಟೇಶ್ವರರಾವ್, ಅನಿತಾ ಮಲ್ಲೇಶ್, ಪಲ್ಲವಿ ದಿಲೀಪ್, ಜಯಶೀಲ ಸುರೇಶ್, ಅನುಪಮಾ ಚನ್ನೇಶ್, ಶಶಿಕಲಾ ನಾರಾಯಣಪ್ಪ, ಮಂಜುಳಾ ಸುಬ್ಬಣ್ಣ, ಅನುಸುಧಾ ಮೋಹನ್ ಪಳನಿ ಸೇರಿ ಇನ್ನಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT