ಶಿವಮೊಗ್ಗ: ನಿವೃತ್ತಿ ಹೆಸರಿನಲ್ಲಿ ಬಡ ಮಹಿಳೆಯನ್ನು ಸೇವೆಯಿಂದ ಬಿಡುಗಡೆಗೊಳಿಸುತ್ತಿರುವ ಕ್ರಮ ಖಂಡಿಸಿ ಅಕ್ಷರ ದಾಸೋಹ ನೌಕರರು ಸೋಮವಾರ ಮಹಾವೀರ ವೃತದಿಂದ ಜಿಲ್ಲಾ ಪಂಚಾಯಿತಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
60 ವರ್ಷ ವಯೋಮಾನದ ನೆಪವೊಡ್ಡಿ 19 ವರ್ಷ ಸೇವೆ ಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅವಮಾನೀಯವಾಗಿ ಬಿಡುಗಡೆ ಮಾಡಿರುವ ಕ್ರಮ ಸರಿಯಲ್ಲ ಎಂದು ದೂರಿದರು.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವುದರ ಜತೆಗೆ ಮಕ್ಕಳಲ್ಲಿ ಏಕಾಗ್ರತೆ ಮತ್ತು ಉತ್ತಮ ಫಲಿತಾಂಶ ಹೊರಹೊಮ್ಮಲು ಈ ತಾಯಂದಿರು ತಮ್ಮ ಜೀವವನ್ನೇ ಮುಡಿಪಾಗಿಟ್ಟಿದ್ದಾರೆ. ನೌಕರರಿಗೆ ಈ ವರ್ಷದಿಂದ ವೇತನ ಹೆಚ್ಚಿಸಬೇಕು. ಯೋಜನೆಯನ್ನೇ ಕಾಯಂ ಮಾಡಬೇಕು. ಇವರನ್ನೇ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟವನ್ನು ಖಾಸಗೀಕರಣಗೊಳಿಸಬಾರದು. ನೌಕರರಿಗೆ ₹ 6 ಸಾವಿರ ವೇತನ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು. ಬಿಸಿಯೂಟ ನೌಕರರನ್ನು ಕಾಯಂಗೊಳಿಸಿ ಸೌಲಭ್ಯ ನೀಡಬೇಕು. ಪ್ರತಿ ತಿಂಗಳ 5ನೇ ತಾರೀಕಿನ ಒಳಗೆ ವೇತನ ಪಾವತಿಸಬೇಕು. ನೇರವಾಗಿ ಶಿಕ್ಷಣ ಇಲಾಖೆಯ ಅಡಿಯಲ್ಲಿಯೇ ಮೇಲ್ವಿಚಾರಣೆ ನಡೆಸಬೇಕು. ಪ್ರತಿಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆಯರು ಇರುವಂತೆ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಹನುಮಮ್ಮ ಖಜಾಂಚಿ ತಾರಾ, ಪ್ರಧಾನ ಕಾರ್ಯದರ್ಶಿ ಸೂರ್ಯಕಲಾ, ಭಾಗ್ಯಮ್ಮ, ಗೀತಾ, ಜಯಮ್ಮ, ಸುನಿತಾ ಇದ್ದರು .