ಸಾಗರ: ‘ಜಿಲ್ಲೆಯಲ್ಲಿ ಮಂಕಿ ಪಾರ್ಕ್ ಅನ್ನು ಎಲ್ಲಿ ಆರಂಭಿಸಬೇಕು ಎಂಬ ಬಗ್ಗೆ ಸರ್ಕಾರ ಇನ್ನೂ ಅಧಿಕೃತವಾಗಿ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ಸ್ಪಷ್ಟಪಡಿಸಿದ್ದಾರೆ.
‘ಈ ಹಿಂದೆ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಬಳಿ ಮಂಕಿ ಪಾರ್ಕ್ ನಿರ್ಮಿಸುವ ಸಂಬಂಧ ಚರ್ಚೆ ನಡೆದಿತ್ತು. ತದನಂತರ ಕಾರ್ಗಲ್ ಸಮೀಪದ ತಲಕಳಲೆ ಬಳಿ ಕೂಡ ಮಂಕಿ ಪಾರ್ಕ್ ನಿರ್ಮಿಸುವ ಸಾಧ್ಯತೆ ಕುರಿತು ಚರ್ಚೆಯಾಗಿದೆ. ತಲಕಳಲೆಯಲ್ಲಿ ಮಂಕಿ ಪಾರ್ಕ್ ಆರಂಭಕ್ಕೆ ಸಿದ್ಧತೆ ಪೂರ್ಣಗೊಂಡಿದೆ ಎಂದು ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ಈ ಕ್ಷೇತ್ರದ ಶಾಸಕರೊಂದಿಗೆ ಸರ್ಕಾರದ ಯಾರೂ ಈ ವಿಷಯವನ್ನು ಪ್ರಸ್ತಾಪಿಸಿಲ್ಲ’ ಎಂದು ಅವರು ತಿಳಿಸಿದ್ದಾರೆ.
‘ತಲಕಳಲೆಯ ಸುತ್ತಮುತ್ತಲ ಪ್ರದೇಶ ಮಂಗನ ಕಾಯಿಲೆ ಬಾಧಿತ ಪ್ರದೇಶವಾಗಿದ್ದು, ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಇಲ್ಲಿ ಮಂಕಿ ಪಾರ್ಕ್ ನಿರ್ಮಿಸಬೇಕೇ ಬೇಡವೇ ಎಂಬ ಕುರಿತು ಸಾಧಕ–ಬಾಧಕಗಳನ್ನು ಪರಿಶೀಲಿಸಿದ ನಂತರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.