ಶಿವಮೊಗ್ಗ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯಕ್ಕಾಗಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಣ್ಣು ಸಂಗ್ರಹ ಅಭಿಯಾನಕ್ಕೆ ಅ. 28ರಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದರು.
ಗುರುವಾರ ಅಭಿಯಾನದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲ ತಾಲ್ಲೂಕು ಕೇಂದ್ರಗಳು, ಆಯ್ದ ಗ್ರಾಮಗಳಲ್ಲಿ ಕೆಂಪೇಗೌಡ ರಥ ಸಂಚರಿಸಲಿದೆ. ಸ್ಥಳೀಯವಾಗಿ ರಥವನ್ನು ಸ್ವಾಗತಿಸಬೇಕು. ಈ ಸಂದರ್ಭದಲ್ಲಿ ಚುನಾಯಿತ ಪ್ರತಿನಿಧಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸಾಹಿತಿಗಳು, ಪ್ರಗತಿಪರ ರೈತರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರನ್ನು ಆಹ್ವಾನಿಸಬೇಕು. ಕೆರೆ, ನದಿ, ಪುಣ್ಯ ಕ್ಷೇತ್ರ, ಐತಿಹಾಸಿಕ ತಾಣಗಳಿಂದ ಸಂಗ್ರಹಿಸಿದ ಮಣ್ಣನ್ನು ಈಗಾಗಲೇ ಒದಗಿಸಲಾಗಿರುವ ಚೀಲದಲ್ಲಿ ತುಂಬಿ ಊರ ಪ್ರಮುಖರ ಸಮ್ಮುಖದಲ್ಲಿ ಹಸ್ತಾಂತರಿಸಬೇಕು ಎಂದು ಹೇಳಿದರು.
ರಥ ಸಂಚರಿಸುವ ಮಾರ್ಗದ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯ ಎಲ್ಲ 262 ಗ್ರಾಮ ಪಂಚಾಯಿತಿಗಳು, 9 ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣು ಸಂಗ್ರಹಿಸಲು ಸೂಚಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಂಪೇಗೌಡ ರಥಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡುವರು. ನ. 5ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಎಲ್ಲಾ ಕಡೆಗಳಿಂದ ಸಂಗ್ರಹಿಸಿದ ಮಣ್ಣನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎನ್.ಡಿ. ಪ್ರಕಾಶ್, ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲಿ ಇಂದು: ಕೆಂಪೇಗೌಡ ರಥ ಮೃತ್ತಿಕೆ (ಮಣ್ಣು) ಸಂಗ್ರಹಕ್ಕೆ ಸಂಜೆ 5 ಗಂಟೆಗೆ ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, 6 ಗಂಟೆಗೆ ಆದಿಚುಂಚನಗಿರಿ ಶಾಖಾ ಮಠ, ಶರಾವತಿ ನಗರ ಕಾಲಬೈರವೇಶ್ವರ ದೇವಸ್ಥಾನ, 7 ಗಂಟೆಗೆ ಚಿಕ್ಕಲ್ ಅರಕೇಶ್ವರ ದೇವಸ್ಥಾನಕ್ಕೆ ತೆರಳಿ ರಾತ್ರಿ ಭದ್ರಾವತಿಯಲ್ಲಿ ವಾಸ್ತವ್ಯ
ಹೂಡಲಿದೆ.
ಶಿವಮೊಗ್ಗದಲ್ಲಿ ಸಂಚಾರ ಇಂದು..
ಕೆಂಪೇಗೌಡ ರಥ ಮೃತ್ತಿಕೆ (ಮಣ್ಣು) ಸಂಗ್ರಹಕ್ಕೆ ಸಂಜೆ 5 ಗಂಟೆಗೆ ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, 6 ಗಂಟೆಗೆ ಆದಿಚುಂಚನಗಿರಿ ಶಾಖಾ ಮಠ, ಶರಾವತಿ ನಗರ ಕಾಲಬೈರವೇಶ್ವರ ದೇವಸ್ಥಾನ, 7 ಗಂಟೆಗೆ ಚಿಕ್ಕಲ್ ಅರಕೇಶ್ವರ ದೇವಸ್ಥಾನಕ್ಕೆ ತೆರಳಿ ರಾತ್ರಿ ಭದ್ರಾವತಿಯಲ್ಲಿ ವಾಸ್ತವ್ಯ ಹೂಡಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.