ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ದರ್ಜೆಗೇರಿದ ಠಾಣೆಗಳಿಗೆ ಅಗತ್ಯ ಸಿಬ್ಬಂದಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆ
Last Updated 26 ಜನವರಿ 2022, 3:43 IST
ಅಕ್ಷರ ಗಾತ್ರ

ಶಿವಮೊಗ್ಗ: ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಿದ ನಂತರ ಸಾಕಷ್ಟು ಸಿಬ್ಬಂದಿ ನಿಯೋಜಿಸಲಾಗಿದೆ. 545 ಸಬ್‌ ಇನ್‌ಸ್ಪೆಕ್ಟರ್‌ಗಳು ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದಾರೆ. 4 ಸಾವಿರ ಕಾನ್‌ಸ್ಟೆಬಲ್‌ಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. 8 ತಿಂಗಳ ತರಬೇತಿ ನಂತರ ಇಲಾಖೆಗೆ ಸೇರಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದ ಡಿಎಆರ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ₹ 200 ಕೋಟಿ ವೆಚ್ಚದಲ್ಲಿ 100 ಪೊಲೀಸ್ ಠಾಣೆ ಕಟ್ಟಡಗಳ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಜಿಲ್ಲೆಯಲ್ಲಿ 105 ಕಾನ್‌ಸ್ಟೆಬಲ್‌ ಹುದ್ದೆ, 32 ಸಬ್ ಇನ್‌ಸ್ಪೆಕ್ಟರ್‌ ಹುದ್ದೆಗಳು ಖಾಲಿ ಇವೆ. ಜಿಲ್ಲೆಯಲ್ಲಿ ಪೊಲೀಸರಿಗೆ ಸುಸಜ್ಜಿತ ಮನೆಗಳು ಮಂಜೂರಾಗಿವೆ. ಶಿವಮೊಗ್ಗದಲ್ಲಿ ಸಂಚಾರ ಪೂರ್ವ ಠಾಣೆ, ಭದ್ರಾವತಿ ಗ್ರಾಮಾಂತರ ಠಾಣೆ ಮತ್ತು ತೀರ್ಥಹಳ್ಳಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು.

ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಅಪರಾಧ ಕೃತ್ಯಗಳ ನಿಯಂತ್ರಣಕ್ಕೆ ಬೀಟ್ ವ್ಯವಸ್ಥೆ ಬಲಪಡಿಸಲಾಗಿದೆ. ಜಾನುವಾರು ಕಳ್ಳ ಸಾಗಣೆ ಬಹಳಷ್ಟು ನಿಂತಿದೆ. ಗಾಂಜಾ ಮತ್ತು ಡ್ರಗ್ಸ್ ಅಪರಾಧಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಭದ್ರಾವತಿ, ತುಂಗಾ ನಗರ ಠಾಣೆಗಳ ವ್ಯಾಪ್ತಿಯಲ್ಲಿ ಅಧಿಕ ಪ್ರಮಾಣದಲ್ಲಿ ಗಾಂಜಾ ವಶಪಡಿಸಿ ಕೊಳ್ಳಲಾಗಿದೆ. ಗಾಂಜಾ ಸೇವನೆ ಮಾಡುವವರ ಆರೋಗ್ಯ ತಪಾಸಣೆ ನಡೆಸಿ ಜೈಲಿಗೆ ಕಳಿಸಲಾಗಿದೆ. ಗಾಂಜಾ ಸೇವನೆ ಪ್ರಮಾಣ ಕಡಿಮೆಯಾಗಿದೆ ಎಂದು ವಿವರ ನೀಡಿದರು.

‘ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಬರುತ್ತಿದ್ದ ಗಾಂಜಾ ಪೂರೈಕೆ ಜಾಲವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಮರಳು, ಕಲ್ಲು ಮತ್ತು ರಿಯಲ್ ಎಸ್ಟೇಟ್ ಮಾಫಿಯಾದವರ ಜತೆ ಕೈ ಜೋಡಿಸುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದಾಗ ಶಿವಮೊಗ್ಗಜಿಲ್ಲೆಯಲ್ಲಿ ಅಪರಾಧ ಚಟುವಟಿಕೆ, ನಿಯಂತ್ರಣ ಕ್ರಮಗಳು ಸಮಾಧಾನಕರವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬಡ್ಡಿ ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಮಾಯಕರಿಗೆ ಸಾಲ, ಬಡ್ಡಿ ವಸೂಲಾತಿಗೆ ಹಿಂಸೆ ನೀಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

‘ಜಿಲ್ಲಾ ಉಸ್ತುವಾರಿ ಬದಲಾವಣೆ ಮುಖ್ಯಮಂತ್ರಿ ನಿರ್ಧಾರ. ನನಗೆ ಚಿಕ್ಕಮಗಳೂರು ಜಿಲ್ಲೆ ಬಗ್ಗೆ ಆಸಕ್ತಿ ಇತ್ತು. ಆದರೆ, ತುಮಕೂರು ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ಬಯಲು ಸೀಮೆಯ ಜಿಲ್ಲೆ ನೀಡಿದರೂ ಕೆಲಸ ಮಾಡುವೆ. ಮುಖ್ಯಮಂತ್ರಿಗೆ ನನ್ನ ಬಗ್ಗೆ ಹೆಚ್ಚಿನ ವಿಶ್ವಾಸವಿದೆ’ ಎಂದರು.

ಪಕ್ಷಾಂತರ ಚರ್ಚೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿ ಬಿಟ್ಟು ಹೋಗುವವರಿಗೆ ರಾಜಕೀಯದಲ್ಲಿ ಭವಿಷ್ಯವಿಲ್ಲ’ ಎಂದು ಕುಟುಕಿದರು.

ಕರ್ತವ್ಯಪರತೆ ಮೆರೆದ ಪೊಲೀಸ್ ತಂಡಗಳಿಗೆ ಪ್ರಶಸ್ತಿ ನೀಡಲಾಯಿತು. ಪೂರ್ವವಲಯ ಉಸ್ತುವಾರಿ ಐಜಿಪಿ ಸತೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಆಮ್ಟೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT