ಶಿವಮೊಗ್ಗ: ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.
ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದರಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಸ್ತೆಯಲ್ಲಿ ಹೋಗುವ ಕುಡುಕರ ರೀತಿ ಮಾತನಾಡುತ್ತಿದ್ದಾರೆ. ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೆ ಎಂಬ ಜ್ಞಾನವೂ ಅವರಿಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ಬಂದರೂ ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಬದಲು ಟೀಕಿಸುತ್ತಿದ್ದಾರೆ ಎಂದು ಹರಿಹಾಯ್ದರು.